ಮಂಡ್ಯ: ಜಿಲ್ಲೆಯ ಕೆ.ಆರ್. ಪೇಟೆ ಪಟ್ಟಣದಲ್ಲಿ ಸಂಚಲನ ಮೂಡಿಸಿದ್ದ ಭ್ರೂಣಲಿಂಗ ಪತ್ತೆ ಮತ್ತು ಭ್ರೂಣಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಓರ್ವ ಮಹಿಳಾ ವೈದ್ಯೆ ಸೇರಿದಂತೆ ಒಟ್ಟು ಮೂವರು ವೈದ್ಯರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ವಿರುದ್ಧ ಫೋಕ್ಸೋ ಸೇರಿದಂತೆ ಒಟ್ಟು 12 ಮೊಕದ್ದಮೆಗಳು ದಾಖಲಾಗಿದ್ದು, ನಾಪತ್ತೆಯಾಗಿರುವ ಮತ್ತೋರ್ವ ವೈದ್ಯೆಗಾಗಿ ತೀವ್ರ ಶೋಧ ಮುಂದುವರಿದಿದೆ.
ಬಂಧಿತರನ್ನು ಕೆ.ಆರ್. ಪೇಟೆಯ ಚೇತನ ಮೆಟರ್ನಿಟಿ ಸೆಂಟರ್ನ ಡಾ. ದಿವ್ಯಚೇತನಾ, ನಾವಿ ಡಯಾಗ್ನೋಸ್ಟಿಕ್ ಸೆಂಟರ್ನ ಡಾ. ವೈ.ಆರ್. ಹರ್ಷಿತ್ ಮತ್ತು ಕುಶಾಲ್ ಡಯಾಗ್ನೋಸ್ಟಿಕ್ ಸೆಂಟರ್ನ ಡಾ. ಹರೀಶ್ ಎಂದು ಗುರುತಿಸಲಾಗಿದೆ. ಪ್ರಕರಣದ ಮತ್ತೋರ್ವ ಆರೋಪಿ ಡಾ. ಪ್ರಿಯಾಂಕಾ ಸದ್ಯ ತಲೆಮರೆಸಿಕೊಂಡಿದ್ದು, ಪೊಲೀಸರು ಜಾಲ ಬೀಸಿದ್ದಾರೆ.
ಸರ್ಕಾರಿ ಆಸ್ಪತ್ರೆಗಳ ಸ್ಕ್ಯಾನಿಂಗ್ ಯಂತ್ರಗಳನ್ನು ಅಕ್ರಮವಾಗಿ ಖಾಸಗಿ ಡಯಾಗ್ನೋಸ್ಟಿಕ್ ಸೆಂಟರ್ಗಳಲ್ಲಿ ಬಳಸಲಾಗುತ್ತಿದೆ ಎಂಬ ಸಾರ್ವಜನಿಕರ ದೂರಿನ ಮೇರೆಗೆ, ಉಪ ಲೋಕಾಯುಕ್ತರಾದ ಬಿ. ವೀರಪ್ಪ ಅವರು ತನಿಖೆಗೆ ಆದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ಏಪ್ರಿಲ್ 17ರಂದು ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿದಾಗ ಈ ಬೃಹತ್ ಜಾಲ ಬಯಲಿಗೆ ಬಂದಿದೆ.
ತನಿಖೆಯ ವೇಳೆ ಲಭ್ಯವಾದ ಮಾಹಿತಿಯಂತೆ:
ಕುಶಾಲ್ ಡಯಾಗ್ನೋಸ್ಟಿಕ್ ಸೆಂಟರ್ನಲ್ಲಿ 18 ವರ್ಷಕ್ಕಿಂತ ಕೆಳಗಿನ 7 ಹೆಣ್ಣು ಮಕ್ಕಳಿಗೆ ನಿಯಮಬಾಹಿರವಾಗಿ ಸ್ಕ್ಯಾನಿಂಗ್ ಮಾಡಲಾಗಿದೆ.
64 ಪ್ರಕರಣಗಳಲ್ಲಿ ವಯಸ್ಸಿನ ದೃಢೀಕರಣ ದಾಖಲೆಗಳಿಲ್ಲದೆ 18 ರಿಂದ 20 ವರ್ಷದೊಳಗಿನ ಮಹಿಳೆಯರಿಗೆ ಸ್ಕ್ಯಾನಿಂಗ್ ಮಾಡಲಾಗಿದೆ.
ಕಡತಗಳ ನಿರ್ವಹಣೆಯಲ್ಲಿ ಭಾರಿ ಲೋಪದೋಷಗಳು ಕಂಡುಬಂದಿದ್ದು, ಆರೋಗ್ಯ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಲಾಗಿದೆ.
ಆರೋಗ್ಯ ಇಲಾಖೆಯ ಅಧಿಕಾರಿಗಳು ನೀಡಿದ ದೂರಿನನ್ವಯ ಕೆ.ಆರ್. ಪೇಟೆ ಪಟ್ಟಣ ಮತ್ತು ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಬಂಧಿತರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) 2023 ರ ಕಲಂ 65(1), 64(2)(ಎಂ), 376(2)(ಎನ್) ಹಾಗೂ ಫೋಕ್ಸೋ ಕಾಯ್ದೆ 2017 ರ ಸೆಕ್ಷನ್ 6 ಮತ್ತು 21 ರ ಅಡಿಯಲ್ಲಿ ಕ್ರಮ ಜರುಗಿಸಲಾಗಿದೆ.
ಕೆ.ಆರ್. ಪೇಟೆ ಪಟ್ಟಣ ಮತ್ತು ಗ್ರಾಮಾಂತರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಈ ಬಂಧನ ಪ್ರಕ್ರಿಯೆ ನಡೆದಿದ್ದು, ವೈದ್ಯಕೀಯ ಲೋಕದ ಕರಾಳ ಮುಖ ಅನಾವರಣಗೊಂಡಂತಾಗಿದೆ.