ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಅಬಕಾರಿ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ತೀವ್ರಗೊಳಿಸಿದ್ದು, ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಗಾಂಜಾವನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತರನ್ನು ಪಶ್ಚಿಮ ಬಂಗಾಳ ಮೂಲದ ಫಿರೋಜ್ ಪಾಷಾ ಮತ್ತು ರಾಣಾ ಸರ್ಕಾರ್ ಎಂದು ಗುರುತಿಸಲಾಗಿದೆ. ಆರೋಪಿಗಳು ಒರಿಸ್ಸಾದಿಂದ ರೈಲಿನ ಮೂಲಕ ಬೆಂಗಳೂರಿಗೆ ಗಾಂಜಾವನ್ನು ಸಾಗಾಟ ಮಾಡುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.
ಬೆಂಗಳೂರು ಅಬಕಾರಿ ಜಂಟಿ ಆಯುಕ್ತರಾದ ಫಿರೋಜ್ ಕಿಲ್ಲೆದಾರ್ ಅವರ ನೇತೃತ್ವದಲ್ಲಿ ನಡೆದ ಈ ವಿಶೇಷ ಕಾರ್ಯಾಚರಣೆಯಲ್ಲಿ, ಶ್ರೀರಾಮಪುರ ವಲಯ ವ್ಯಾಪ್ತಿಯ ಜಾಕ್ಕಯ್ಯನಕೆರೆ ಮತ್ತು ರೈಲ್ವೆ ಸ್ಟೇಷನ್ ಸಮೀಪ ಆರೋಪಿಗಳನ್ನು ಮಾಲು ಸಮೇತ ವಶಕ್ಕೆ ಪಡೆಯಲಾಗಿದೆ.
ಜಪ್ತಿ ಮಾಡಿದ ವಸ್ತುಗಳು:
ಒಟ್ಟು 35.580 ಕೆ.ಜಿ. ಒಣಗಿದ ಗಾಂಜಾ.
ಜಪ್ತಿ ಮಾಡಿದ ಮಾದಕ ವಸ್ತುವಿನ ಅಂದಾಜು ಮಾರುಕಟ್ಟೆ ಮೌಲ್ಯ 30 ಲಕ್ಷ ರೂಪಾಯಿ.
ಈ ಕೃತ್ಯಕ್ಕೆ ಸಂಬಂಧಿಸಿದಂತೆ ಮಾದಕ ದ್ರವ್ಯ ನಿಯಂತ್ರಣ ಕಾಯ್ದೆ (NDPS Act 1985) ಅಡಿಯಲ್ಲಿ ಒಟ್ಟು ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದ್ದು, ಜಾಲದ ಹಿಂದೆ ಇರುವ ಇತರ ವ್ಯಕ್ತಿಗಳ ಪತ್ತೆಗಾಗಿ ತನಿಖೆ ಮುಂದುವರಿದಿದೆ.
ನಗರದಲ್ಲಿ ಡ್ರಗ್ಸ್ ಮಾಫಿಯಾವನ್ನು ಮಟ್ಟಹಾಕಲು ಅಬಕಾರಿ ಇಲಾಖೆಯು ಇಂತಹ ಹಠಾತ್ ಕಾರ್ಯಾಚರಣೆಗಳನ್ನು ಮುಂದುವರಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.