ಮಡಿಕೇರಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ದೇಶದಲ್ಲಿ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೊಡಗು ಜಿಲ್ಲೆಯ ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಅವರು ಅತ್ಯಂತ ಮಹತ್ವದ ಹಾಗೂ ಮಾದರಿ ನಿರ್ಧಾರವೊಂದನ್ನು ಕೈಗೊಂಡಿದ್ದಾರೆ.
ತಮಗೆ ಸರ್ಕಾರದ ವತಿಯಿಂದ ನೀಡಲಾಗಿರುವ ಪೊಲೀಸ್ ಬೆಂಗಾವಲು (ಎಸ್ಕಾರ್ಟ್) ವಾಹನವನ್ನು ತಕ್ಷಣದಿಂದಲೇ ಹಿಂಪಡೆಯುವಂತೆ ಕೋರಿ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಕೆ. ರಾಮರಾಜನ್ ಅವರಿಗೆ ಶಾಸಕರು ಅಧಿಕೃತ ಪತ್ರ ಬರೆದಿದ್ದಾರೆ.
ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ಹೊಂದಿರುವ ಶಾಸಕ ಎ.ಎಸ್. ಪೊನ್ನಣ್ಣ ಅವರು, ಪ್ರಸ್ತುತ ಸನ್ನಿವೇಶದಲ್ಲಿ ಇಂಧನ ಉಳಿತಾಯ ಮಾಡುವುದು ಮತ್ತು ಸರ್ಕಾರಿ ವೆಚ್ಚವನ್ನು ಕಡಿತಗೊಳಿಸುವುದು ಅತ್ಯಗತ್ಯ ಎಂಬ ಸಂದೇಶವನ್ನು ಸಾರಲು ಈ ನಿರ್ಧಾರಕ್ಕೆ ಮುಂದಾಗಿದ್ದಾರೆ. ಜಾಗತಿಕ ವಿದ್ಯಮಾನಗಳಿಂದಾಗಿ ಇಂಧನ ದರಗಳು ಹೆಚ್ಚುತ್ತಿರುವುದರಿಂದ ಪ್ರತಿಯೊಬ್ಬರೂ ತೈಲ ಬಳಕೆಯನ್ನು ಮಿತಿಗೊಳಿಸಬೇಕಾದ ಅನಿವಾರ್ಯತೆ ಇದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ ಎನ್ನಲಾಗಿದೆ.
ಸಾಮಾನ್ಯವಾಗಿ ಜನಪ್ರತಿನಿಧಿಗಳು ಹಾಗೂ ಉನ್ನತ ಸ್ಥಾನಮಾನದಲ್ಲಿರುವವರು ಭದ್ರತೆ ಮತ್ತು ಬೆಂಗಾವಲು ವಾಹನಗಳನ್ನೇ ತಮಗಿರುವ ಗೌರವ ಎಂದು ಭಾವಿಸುವ ಈ ದಿನಗಳಲ್ಲಿ, ಶಾಸಕ ಪೊನ್ನಣ್ಣ ಅವರು ಜನಸಾಮಾನ್ಯರ ಸ್ಥಿತಿಗೆ ಸ್ಪಂದಿಸಿ ತಮ್ಮ ಬೆಂಗಾವಲು ವಾಹನವನ್ನೇ ಕೈಬಿಟ್ಟಿರುವುದು ರಾಜಕೀಯ ವಲಯದಲ್ಲಿ ತೀವ್ರ ಗಮನ ಸೆಳೆದಿದೆ.
ತಮ್ಮ ಈ ಶ್ಲಾಘನೀಯ ಕ್ರಮದ ಮೂಲಕ ಸಾರ್ವಜನಿಕ ಹಣ ಪೋಲಾಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೊಸದೊಂದು ಸಂಪ್ರದಾಯಕ್ಕೆ ಮುನ್ನುಡಿ ಬರೆದಿರುವ ಶಾಸಕರ ನಡೆಗೆ ಕೊಡಗು ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ವ್ಯಾಪಕ ಮೆಚ್ಚುಗೆ ಹಾಗೂ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆ ವ್ಯಕ್ತವಾಗುತ್ತಿದೆ.