ಮನೆ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ ಹಾಗೂ ನಗದು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಕೇವಲ 8 ಗಂಟೆಗಳ ದಾಖಲೆ ಅವಧಿಯಲ್ಲಿ ಹೆಡೆಮುರಿಕಟ್ಟುವಲ್ಲಿ ಭಟ್ಕಳ ಶಹರ ಪೊಲೀಸರು ಯಶಸ್ವಿಯಾಗಿದ್ದಾರೆ.
ಭಟ್ಕಳದ ಪುರವರ್ಗ ನಿವಾಸಿಗಳಾದ ಮಹಮದ್ ರಾಹಿಲ್ ಮತ್ತು ನೌಶಾದ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಳ್ಳಲಾಗಿದೆ.
ಭಟ್ಕಳದ ಪುರವರ್ಗದಲ್ಲಿರುವ ಮನೆಯೊಂದರ ಸದಸ್ಯರು ಹೊರಗಡೆ ಹೋಗಿದ್ದ ಸಂದರ್ಭವನ್ನು ಸಂಚು ಹೂಡಿದ್ದ ಕಳ್ಳರು, ಮೇ 18ರ ಸಂಜೆ 5:40 ರಿಂದ ಮೇ 20ರ ಬೆಳಿಗ್ಗೆ 8:00 ಗಂಟೆಯ ನಡುವಿನ ಅವಧಿಯಲ್ಲಿ ಮನೆಯ ಬೀಗ ಮುರಿದು ಒಳನುಗ್ಗಿದ್ದರು. ಕಪಾಟಿನಲ್ಲಿದ್ದ ಚಿನ್ನ ಹಾಗೂ ನಗದನ್ನು ದೋಚಿ ಪರಾರಿಯಾಗಿದ್ದರು. ಈ ಬಗ್ಗೆ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಾಗಿತ್ತು.
ಪ್ರಕರಣ ದಾಖಲಾಗುತ್ತಿದ್ದಂತೆ ತಕ್ಷಣವೇ ಎಚ್ಚೆತ್ತ ಪೊಲೀಸರು ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿದರು. ತಾಂತ್ರಿಕ ಹಾಗೂ ಖಚಿತ ಮಾಹಿತಿ ಆಧರಿಸಿ ಪುರವರ್ಗದ ಹತ್ತಿರ ಜಂಟಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಇಬ್ಬರೂ ಆರೋಪಿಗಳನ್ನು ಸುತ್ತುವರಿದು ವಶಕ್ಕೆ ಪಡೆದಿದ್ದಾರೆ. ತೀವ್ರ ವಿಚಾರಣೆಗೆ ಒಳಪಡಿಸಿದಾಗ ಆರೋಪಿಗಳು ತಮ್ಮ ಕೃತ್ಯವನ್ನು ಒಪ್ಪಿಕೊಂಡಿದ್ದಾರೆ.
ವಶಪಡಿಸಿಕೊಂಡ ಮಾಲು: ಆರೋಪಿಗಳಿಂದ 2,21,000 ರೂ. ಮೌಲ್ಯದ 17 ಗ್ರಾಂ ತೂಕದ ಬಂಗಾರದ ಆಭರಣ ಹಾಗೂ 22,860 ರೂ. ನಗದು ಹಣವನ್ನು ಜಪ್ತಿ ಮಾಡಲಾಗಿದೆ.
ನ್ಯಾಯಾಂಗ ಬಂಧನ: ಬಂಧಿತ ಆರೋಪಿಗಳನ್ನು ನಿಯಮಾನುಸಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ (SP) ದೀಪನ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ (ASP) ಎಂ. ಕೃಷ್ಣಮೂರ್ತಿ ಹಾಗೂ ಭಟ್ಕಳ ಉಪ-ವಿಭಾಗದ ಡಿವೈಎಸ್ಪಿ ಗಿರೀಶ ಬಿ. ಅವರ ಸಮರ್ಥ ಮಾರ್ಗದರ್ಶನದಲ್ಲಿ ಈ ಯಶಸ್ವಿ ಕಾರ್ಯಾಚರಣೆ ನಡೆದಿದೆ.
ಭಟ್ಕಳ ಶಹರ ಠಾಣೆಯ ಪೊಲೀಸ್ ನಿರೀಕ್ಷಕರಾದ (CPI) ದಿವಾಕರ ಪಿ.ಎಂ. ನೇತೃತ್ವದಲ್ಲಿ, ಪಿಎಸ್ಐ ನವೀನ್ ಎಸ್. ನಾಯ್ಕ, ಸಿಬ್ಬಂದಿಗಳಾದ ದಿನೇಶ ನಾಯಕ, ಸತೀಶ ಭಟ್ಟ, ರವಿ ಪಟಗಾರ, ಜಗದೀಶ ನಾಯ್ಕ, ಕಿರಣ ಪಾಟೀಲ, ಕಾಶಿನಾಥ ಕೋಟಗುಣಸಿ, ಮಲ್ಲಿಕಾರ್ಜುನ ಉಟಗಿ ಮತ್ತು ವಿದ್ಯಾ ಆಚಾರಿ ಅವರು ಕೇವಲ 8 ಗಂಟೆಗಳಲ್ಲಿ ಕಳ್ಳರನ್ನು ಪತ್ತೆ ಹಚ್ಚುವಲ್ಲಿ ಶ್ಲಾಘನೀಯ ಪಾತ್ರ ವಹಿಸಿದ್ದಾರೆ.
ಕಳ್ಳತನ ನಡೆದ ಅತ್ಯಲ್ಪ ಅವಧಿಯಲ್ಲೇ ಕಾರ್ಯಪ್ರವೃತ್ತರಾಗಿ ಕಳ್ಳರನ್ನು ಸದ್ದಿಲ್ಲದೆ ಬಂಧಿಸಿ, ಸಾರ್ವಜನಿಕರ ಸ್ವತ್ತನ್ನು ಮರಳಿ ಪತ್ತೆಹಚ್ಚಿದ ಭಟ್ಕಳ ಶಹರ ಪೊಲೀಸ್ ಠಾಣೆಯ ಇಡೀ ತಂಡಕ್ಕೆ ಜಿಲ್ಲಾ ಪೊಲೀಸ್ ಇಲಾಖೆ ಸೇರಿದಂತೆ ಸಾರ್ವಜನಿಕ ವಲಯದಿಂದ ವ್ಯಾಪಕ ಶ್ಲಾಘನೆ ಹಾಗೂ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.