ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಬೋಧಕರ ಕೊರತೆಯನ್ನು ನೀಗಿಸಲು ಕರ್ನಾಟಕ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಸಕ್ತ 2026-27ನೇ ಶೈಕ್ಷಣಿಕ ವರ್ಷದ ಆರಂಭದಲ್ಲೇ ಉದ್ಯೋಗಾಂಕ್ಷಿಗಳಿಗೆ ಬಿಗ್ ಗಿಫ್ಟ್ ನೀಡಿರುವ ಸರ್ಕಾರ, ಜೂನ್ ತಿಂಗಳಿನಲ್ಲೇ ಬರೋಬ್ಬರಿ 51,000 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ.
ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ತೊಂದರೆಯಾಗಬಾರದು ಎಂಬ ಹಿತದೃಷ್ಟಿಯಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಮೇ 22ರಂದೇ ಈ ಕುರಿತು ಅಧಿಕೃತ ಆದೇಶ ಹೊರಡಿಸಿದೆ.
ಮಂಜೂರಾಗಿರುವ ಒಟ್ಟು 51 ಸಾವಿರ ಹುದ್ದೆಗಳಲ್ಲಿ ಪ್ರಾಥಮಿಕ ಶಾಲೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
ಸರ್ಕಾರಿ ಪ್ರಾಥಮಿಕ ಶಾಲೆಗಳು: 40,000 ಅತಿಥಿ ಶಿಕ್ಷಕರು.
ಸರ್ಕಾರಿ ಪ್ರೌಢಶಾಲೆಗಳು: 11,000 ಅತಿಥಿ ಶಿಕ್ಷಕರು.
ತಾತ್ಕಾಲಿಕ ನೇಮಕಾತಿ: ಈ ನೇಮಕಾತಿಯು ಸಂಪೂರ್ಣವಾಗಿ ತಾತ್ಕಾಲಿಕವಾಗಿದ್ದು, ನೇರ ನೇಮಕಾತಿ ಮೂಲಕ ಖಾಯಂ ಶಿಕ್ಷಕರು ಬರುವವರೆಗೆ ಅಥವಾ 2026-27ನೇ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ.
ಆಯ್ಕೆ ವಿಧಾನ: ಸ್ಥಳೀಯವಾಗಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲು ಇಲಾಖೆ ಸೂಚಿಸಿದೆ.
ಗೌರವಧನ: ಅತಿಥಿ ಶಿಕ್ಷಕರ ಗೌರವಧನ ಪಾವತಿಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯು ಈಗಾಗಲೇ ಹಸಿರು ನಿಶಾನೆ ತೋರಿಸಿದೆ.
ಸಾಮಾನ್ಯವಾಗಿ ಶೈಕ್ಷಣಿಕ ವರ್ಷ ಆರಂಭವಾದ ನಂತರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿತ್ತು. ಆದರೆ ಈ ಬಾರಿ ಶಾಲಾ ಆರಂಭದ ದಿನವೇ ಶಿಕ್ಷಕರು ಲಭ್ಯವಿರಬೇಕು ಎಂಬ ಉದ್ದೇಶದಿಂದ ಮುಂಚಿತವಾಗಿಯೇ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ವಿಶೇಷವಾಗಿ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಅನುಕೂಲವಾಗಲಿದೆ.
ರಾಜ್ಯದಲ್ಲಿ ಶಿಕ್ಷಣ ಕ್ರಾಂತಿಗೆ ಮುನ್ನುಡಿ ಬರೆಯಲಿರುವ ಮಹತ್ವದ ‘ಕರ್ನಾಟಕ ಪಬ್ಲಿಕ್ ಸ್ಕೂಲ್’ (KPS) ಯೋಜನೆಗೆ ಜೂನ್ 1 ರಂದು ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.
ರಾಜ್ಯಾದ್ಯಂತ ಒಟ್ಟು 1,000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗುತ್ತಿದ್ದು, ಇವುಗಳಲ್ಲಿ ಶಿವಮೊಗ್ಗ ಜಿಲ್ಲೆಯ 19 ಶಾಲೆಗಳು ಸೇರಿವೆ. ಈ ಪ್ರತಿ ಕೆಪಿಎಸ್ ಸಂಸ್ಥೆಯ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರ ತಲಾ 3.5 ಕೋಟಿ ರೂಪಾಯಿ ಅನುದಾನವನ್ನು ಮೀಸಲಿಟ್ಟಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
정 ಸರ್ಕಾರದ ಈ ದಿಟ್ಟ ನಿರ್ಧಾರದಿಂದಾಗಿ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸಿಗುವುದು ಖಚಿತವಾದಂತಾಗಿದೆ. ಅಲ್ಲದೆ, ಡಿ.ಇಡಿ (D.Ed) ಮತ್ತು ಬಿ.ಇಡಿ (B.Ed) ಪದವಿ ಪಡೆದು ಉದ್ಯೋಗದ ನಿರೀಕ್ಷೆಯಲ್ಲಿದ್ದ ಸಾವಿರಾರು ನಿರುದ್ಯೋಗಿ ಯುವಕ-ಯುವತಿಯರಿಗೆ ಇದು ಸುವರ್ಣಾವಕಾಶ ಕಲ್ಪಿಸಿದೆ.