Police Roundup

ಮೈಸೂರು: ಜೂನ್ 12 ರಂದು ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ; ಬೃಹತ್ ಜಾಗೃತಿ ಜಾಥಾ, ಕರಪತ್ರ ಹಂಚಿಕೆ ಹಾಗೂ ಕಡ್ಡಾಯ ಪ್ರಮಾಣ ವಚನಕ್ಕೆ ಅಪರ ಜಿಲ್ಲಾಧಿಕಾರಿ ಸೂಚನೆ

Share News

ಮೈಸೂರು: ಜಿಲ್ಲಾಡಳಿತದ ವತಿಯಿಂದ ಜೂನ್ 12 ರಂದು ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಐಶ್ವರ್ಯ ಆರ್. ಅವರು ತಿಳಿಸಿದರು.

​ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

 

ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಜೂನ್ 12 ರಂದು ಬೆಳಿಗ್ಗೆ ಮೈಸೂರಿನ ಕೋಟೆ ಆಂಜನೇಯಸ್ವಾಮಿ ದೇವಾಲಯದಿಂದ ಪೀಪಲ್ಸ್ ಪಾರ್ಕ್ ವರೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳ ಬೃಹತ್ ಜಾಗೃತಿ ಜಾಥಾ ನಡೆಯಲಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಡೊಳ್ಳು ಕುಣಿತ ಹಾಗೂ ವೀರಗಾಸೆ ಕಲಾ ತಂಡಗಳು ಈ ಜಾಥಾದಲ್ಲಿ ಭಾಗವಹಿಸಿ ವಿಶೇಷ ಮೆರುಗು ನೀಡಲಿವೆ ಎಂದು ಅಪರ ಜಿಲ್ಲಾಧಿಕಾರಿಗಳು ವಿವರಿಸಿದರು.

 

ಅಂದು ಬೆಳಿಗ್ಗೆ 11:00 ಗಂಟೆಗೆ ಪೀಪಲ್ಸ್ ಪಾರ್ಕ್‌ ನಲ್ಲಿ ಪ್ರಧಾನ ವೇದಿಕೆ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಕ್ಷೇತ್ರ ಮಟ್ಟದಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿರುವ ಸ್ವಯಂ ಸೇವಕರನ್ನು ಗುರುತಿಸಿ ಸನ್ಮಾನಿಸಲಾಗುವುದು ಎಂದರು.

 

ಜೂನ್ 12 ರಂದು ಬೆಳಿಗ್ಗೆ 11:00 ಗಂಟೆಗೆ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಗ್ರಾಮ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಕಚೇರಿಗಳಲ್ಲಿ ಬಾಲಕಾರ್ಮಿಕ ಪದ್ಧತಿ ವಿರೋಧಿ ‘ಪ್ರಮಾಣ ವಚನ’ ಸ್ವೀಕರಿಸಲಾಗುವುದು. ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸುವಂತೆ ಅವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

 

ಕರಪತ್ರ ಹಂಚಿಕೆ: ಜಾಥಾ ನಡೆಯುವ ಸಂದರ್ಭದಲ್ಲಿ ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿ ಹಾಗೂ ವಾಣಿಜ್ಯ ಸಂಸ್ಥೆಗಳಿಗೆ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಹಾಗೂ ನಿಯಂತ್ರಣ) ಕಾಯ್ದೆ 1986 ರ ಕುರಿತು ಮಾಹಿತಿಯಿರುವ ಕರಪತ್ರಗಳನ್ನು ಹಂಚುವ ಮೂಲಕ ವ್ಯಾಪಕ ಜಾಗೃತಿ ಮೂಡಿಸಲು ಸೂಚಿಸಲಾಯಿತು.

​ಡಂಗೂರ ಹಾಗೂ ಧ್ವನಿವರ್ಧಕ ಪ್ರಚಾರ: ಮೈಸೂರು ನಗರ, ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಡಂಗೂರ’ ಸಾರಿಸುವ ಮೂಲಕ ಮತ್ತು ಸ್ಥಳೀಯ ಕಸ ವಿಲೇವಾರಿ ವಾಹನಗಳ ಧ್ವನಿವರ್ಧಕಗಳ ಮೂಲಕ ಬಾಲಕಾರ್ಮಿಕ ವಿರೋಧಿ ಘೋಷಣೆಗಳನ್ನು ಉಚಿತವಾಗಿ ವ್ಯಾಪಕವಾಗಿ ಪ್ರಚಾರ ಮಾಡಲು ಇಲಾಖೆಗಳಿಗೆ ನಿರ್ದೇಶಿಸಲಾಯಿತು.

 

ವಿದ್ಯಾರ್ಥಿಗಳಿಗೆ ಸ್ಪರ್ಧೆಗಳು: ಬಾಲಕಾರ್ಮಿಕ ಪದ್ಧತಿ ವಿರೋಧಿ ಕುರಿತು ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಾಲೇಜು ಮಟ್ಟದಲ್ಲಿ ಪ್ರಬಂಧ, ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.

​ರಕ್ಷಣಾ ಅಭಿಯಾನಕ್ಕೆ ಕರೆ:

ಬಾಲಕಾರ್ಮಿಕ & ಕಿಶೋರ ಕಾರ್ಮಿಕ ಕಾಯ್ದೆ 1986 ಕಲಂ 17ರಡಿ ನೇಮಕಗೊಂಡ ಅಧಿಕಾರಿಗಳ ತಂಡದ ಸಹಭಾಗಿತ್ವದಲ್ಲಿ ತಾಲ್ಲೂಕುವಾರು ‘ಬಾಲ, ಕಿಶೋರ ಕಾರ್ಮಿಕ ರಕ್ಷಣಾ ಅಭಿಯಾನ’ವನ್ನು ಹಮ್ಮಿಕೊಂಡು, ದುಡಿಯುತ್ತಿರುವ ಬಾಲ/ಕಿಶೋರ ಕಾರ್ಮಿಕರನ್ನು ತಕ್ಷಣವೇ ರಕ್ಷಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

 

ಈ ಮಹತ್ವದ ಪೂರ್ವಭಾವಿ ಸಭೆಯಲ್ಲಿ ಮೈಸೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತೆ ಲಲಿತಾ ಬಾಯಿ, ಮೈಸೂರು ವಿಭಾಗದ ಕಾರ್ಮಿಕ ಅಧಿಕಾರಿ ಚೇತನ್ ಕುಮಾರ್, ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ್ ಎಚ್.ಪಿ ಹಾಗೂ ಕಾರ್ಮಿಕ ಇಲಾಖೆಯ ಎಲ್ಲಾ ಹಿರಿಯ ಕಾರ್ಮಿಕ ನಿರೀಕ್ಷಕರು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin