ಉಡುಪಿ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಮತ್ತೊಮ್ಮೆ ವಿವಾದದ ಸುಳಿಗೆ ಸಿಲುಕಿದ್ದಾರೆ. ಉಡುಪಿ ಜಿಲ್ಲಾ ಪ್ರವಾಸದ ವೇಳೆ ಅವರು ಮಾಜಿ ರೌಡಿಶೀಟರ್ ಒಬ್ಬನಿಗೆ ಕಾರಿನಲ್ಲೇ ಕುಳಿತು ತಲೆ ಮುಟ್ಟಿ ಆಶೀರ್ವದಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ.
ಇತ್ತೀಚೆಗಷ್ಟೇ ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿದ್ದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಜಿಲ್ಲೆಯ ವಿವಿಧ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಈ ಪ್ರವಾಸದ ವೇಳೆ ಅವರು ತಮ್ಮ ಕಾರಿನಲ್ಲಿ ಕುಳಿತಿದ್ದ ಸಂದರ್ಭದಲ್ಲಿ, ಪ್ರಮುಖ ಕ್ರಿಮಿನಲ್ ಪ್ರಕರಣಗಳ ಆರೋಪಿಯಾಗಿರುವ ಸೋನು ಸುಧೀರ್ ಎಂಬಾತನ ತಲೆ ಮುಟ್ಟಿ ಆಶೀರ್ವದಿಸಿದ್ದಾರೆ ಎನ್ನಲಾದ ದೃಶ್ಯಗಳು ಮುನ್ನೆಲೆಗೆ ಬಂದಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಮಹಿಳಾ ಆಯೋಗದ ಅಧ್ಯಕ್ಷರಿಂದ ಆಶೀರ್ವಾದ ಪಡೆದಿರುವ ಸೋನು ಸುಧೀರ್ ಎರಡು ಪ್ರಮುಖ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಯಾಗಿದ್ದಾನೆ. ಅಷ್ಟೇ ಅಲ್ಲದೆ, ಈತ 2021 ರಿಂದ 2023 ರವರೆಗೆ ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣೆಯ ರೌಡಿಶೀಟರ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದ ಎನ್ನುವ ಮಾಹಿತಿ ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಇಂತಹ ಹಿನ್ನೆಲೆಯುಳ್ಳ ವ್ಯಕ್ತಿಯೊಂದಿಗೆ ಸಾಂವಿಧಾನಿಕ ಹುದ್ದೆಯಲ್ಲಿರುವವರು ಕಾಣಿಸಿಕೊಂಡಿರುವುದು ಸಾರ್ವಜನಿಕರಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಡಾ. ನಾಗಲಕ್ಷ್ಮೀ ಚೌಧರಿ ಅವರು ಇಂತಹ ವಿವಾದಾತ್ಮಕ ವ್ಯಕ್ತಿಗಳೊಂದಿಗೆ ಕಾಣಿಸಿಕೊಳ್ಳುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ವಿವಾದಿತ ಬಲಪಂಥೀಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ ಮಹಿಳಾ ಆಯೋಗದ ಅಧ್ಯಕ್ಷರು ಶುಭ ಹಾರೈಸಿದ್ದ ವಿಡಿಯೋ ಕೂಡ ವೈರಲ್ ಆಗಿ ದೊಡ್ಡ ಮಟ್ಟದ ರಾಜಕೀಯ ಹಾಗೂ ಸಾಮಾಜಿಕ ವಿವಾದ ಸೃಷ್ಟಿಸಿತ್ತು.
ಇದೀಗ ಅದರ ಬೆನ್ನಲ್ಲೇ ರೌಡಿಶೀಟರ್ ಹಿನ್ನೆಲೆಯುಳ್ಳ ವ್ಯಕ್ತಿಯೊಂದಿಗೆ ಕಾಣಿಸಿಕೊಂಡಿರುವುದು ಮತ್ತು ಆತನಿಗೆ ಆಶೀರ್ವದಿಸಿರುವ ನಡೆಗೆ ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಹಾಗೂ ಸಾರ್ವಜನಿಕರು ತೀವ್ರ ಅಸಮಾಧಾನ ಮತ್ತು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.