ದೊಡ್ಡಬಳ್ಳಾಪುರ: ಇಲ್ಲಿನ ನೇರಳಘಟ್ಟ ಕಾಲೋನಿಯಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅಳಿಯನ ಹಲ್ಲೆಗೆ ಒಳಗಾಗಿದ್ದ ಮಾವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಸಂಭವಿಸಿದೆ.
ನೇರಳಘಟ್ಟ ಕಾಲೋನಿ ನಿವಾಸಿ ನರಸಪ್ಪ (61) ಕೊಲೆಯಾದ ದುರ್ದೈವಿ. ಹಲ್ಲೆ ನಡೆಸಿದ ಆರೋಪಿಯನ್ನು ಅಳಿಯ ಲಕ್ಷ್ಮಣ (40) ಎಂದು ಗುರುತಿಸಲಾಗಿದೆ.
ಜೂನ್ 14ರಂದು ನರಸಪ್ಪ ಅವರು ಯಾವುದೋ ಕ್ಷುಲ್ಲಕ ಕಾರಣಕ್ಕೆ ತಮ್ಮ ಮಗಳೊಂದಿಗೆ (ಲಕ್ಷ್ಮಣನ ಪತ್ನಿ) ಜಗಳ ತೆಗೆದು, ಆಕೆಯ ಮೇಲೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಇದರಿಂದ ತೀವ್ರ ಕೋಪಗೊಂಡ ಅಳಿಯ ಲಕ್ಷ್ಮಣ, “ನನ್ನ ಹೆಂಡತಿಗೆ ಏಕೆ ಹೊಡೆಯುತ್ತೀಯಾ?” ಎಂದು ಮಾವ ನರಸಪ್ಪ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾನೆ.
ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿದಾಗ, ಆಕ್ರೋಶಗೊಂಡ ಲಕ್ಷ್ಮಣ ಮಾವನ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ. ಅಲ್ಲದೆ, ಅಲ್ಲೇ ಇದ್ದ ಕಲ್ಲಿನಿಂದ ನರಸಪ್ಪ ಅವರ ಎರಡೂ ಕಾಲುಗಳಿಗೆ ಜಜ್ಜಿ ಗಂಭೀರವಾಗಿ ಗಾಯಗೊಳಿಸಿದ್ದಾನೆ ಎನ್ನಲಾಗಿದೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ನರಸಪ್ಪ ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ತೀವ್ರ ರಕ್ತಸ್ರಾವ ಹಾಗೂ ಗಂಭೀರ ಗಾಯಗಳಾಗಿದ್ದರಿಂದ ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ (ಜೂನ್ 15) ನರಸಪ್ಪ ಅವರು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.