ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನಲ್ಲಿ ಅಕ್ರಮವಾಗಿ ನಾಡ ಬಂದೂಕು ತಯಾರಿಸುತ್ತಿದ್ದ ಅಡ್ಡೆಯೊಂದರ ಮೇಲೆ ದಾಳಿ ನಡೆಸಿರುವ ಪೊಲೀಸರು, ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಅಕ್ಲಾಪುರ ಗ್ರಾಮದಲ್ಲಿ ಈ ಕಾರ್ಯಾಚರಣೆ ನಡೆದಿದೆ.
ಕೋಣಂದೂರು ಮೂಲದ ಸುಧಾಕರ ಆಚಾರಿ (೫೬) ಬಂಧಿತ ಆರೋಪಿ. ಈತ ವೃತ್ತಿಯಲ್ಲಿ ಕೃಷಿಕನಾಗಿದ್ದು, ಇದರ ಜೊತೆಗೆ ಬಡಗಿ (Carpentry) ಕೆಲಸವನ್ನೂ ಮಾಡಿಕೊಂಡಿದ್ದ ಎನ್ನಲಾಗಿದೆ.
ಆರೋಪಿ ಸುಧಾಕರ ಆಚಾರಿ ಬಡಗಿ ಕೆಲಸದ ನೆಪದಲ್ಲಿ ಕಾನೂನುಬಾಹಿರವಾಗಿ ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸುತ್ತಿದ್ದಾನೆ ಎಂಬ ಖಚಿತ ಮಾಹಿತಿ ತೀರ್ಥಹಳ್ಳಿ ಪೊಲೀಸರಿಗೆ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ಅಕ್ಲಾಪುರ ಗ್ರಾಮದ ಆರೋಪಿಯ ಜಾಗದ ಮೇಲೆ ಅನಿರೀಕ್ಷಿತ ದಾಳಿ ನಡೆಸಿ ಆತನನ್ನು ವಶಕ್ಕೆ ಪಡೆದಿದ್ದಾರೆ.
ಪೊಲೀಸರು ದಾಳಿ ನಡೆಸಿದ ವೇಳೆ ನಾಡ ಬಂದೂಕು ತಯಾರಿಕೆಗೆ ಬಳಸಲಾಗುತ್ತಿದ್ದ ಲೋಹದ ಸಾಮಗ್ರಿಗಳು, ಉಪಕರಣಗಳು ಹಾಗೂ ಇತರೆ ಕಚ್ಚಾ ವಸ್ತುಗಳನ್ನು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಸದ್ಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ತೀರ್ಥಹಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಇಮ್ರಾನ್ ಬೇಗ್ ಮತ್ತು ಸಿಬ್ಬಂದಿಗಳ ನೇತೃತ್ವದ ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸುವ ಮೂಲಕ ಮಲೆನಾಡು ಭಾಗದಲ್ಲಿ ಅಕ್ರಮ ಆಯುಧ ತಯಾರಿಕಾ ಚಟುವಟಿಕೆಗೆ ಪ್ರಮುಖ ಬ್ರೇಕ್ ಹಾಕಿದೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಈ ಜಾಲದಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಕುರಿತು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
