ಬಳ್ಳಾರಿ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಮಾದಕ ವಸ್ತುಗಳ ಸಾಗಾಟ ಮತ್ತು ಮಾರಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ, ಜಪ್ತಿ ಮಾಡಲಾಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾವನ್ನು ಬಳ್ಳಾರಿ ಜಿಲ್ಲಾ ಪೊಲೀಸ್ ಇಲಾಖೆಯು ನ್ಯಾಯಾಲಯದ ಆದೇಶದಂತೆ ಶನಿವಾರ ಯಶಸ್ವಿಯಾಗಿ ನಾಶಪಡಿಸಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಡಾ. ಸುಮನ್ ಡಿ. ಪೆನ್ನೇಕರ್ ಅವರ ನೇರ ನೇತೃತ್ವದಲ್ಲಿ ಈ ಇಡೀ ಕಾರ್ಯಾಚರಣೆ ನಡೆದಿದೆ. ವಿವಿಧ ಅಕ್ರಮ ಮಾದಕ ವಸ್ತುಗಳ ಪ್ರಕರಣಗಳಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದ ಒಟ್ಟು 15.740 ಕೆ.ಜಿ. ತೂಕದ ಗಾಂಜಾವನ್ನು ವಿಲೇವಾರಿ ಮಾಡಲಾಯಿತು. ಇದರ ಅಂದಾಜು ಮಾರುಕಟ್ಟೆ ಮೌಲ್ಯ ಬರೋಬ್ಬರಿ ₹6,68,655 ರೂಪಾಯಿ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಬಳ್ಳಾರಿ ನಗರದ ಹೊರವಲಯದ ಹರಗಿನಡೋಣಿ ಸಮೀಪದಲ್ಲಿರುವ ‘ಸೂರ್ಯಕಾಂತ ಎನ್ವಿರಾನ್ಮೆಂಟ್ ಟೆಕ್ನಾಲಜೀಸ್ ಜೈವಿಕ ವೈದ್ಯಕೀಯ ವಿಲೇವಾರಿ ಘಟಕ’ದಲ್ಲಿ (Biomedical Waste Disposal Plant) ಪರಿಸರಕ್ಕೆ ಯಾವುದೇ ಹಾನಿಯಾಗದಂತೆ ಅತ್ಯಂತ ಸುರಕ್ಷಿತವಾಗಿ ಈ ಗಾಂಜಾವನ್ನು ನಾಶಪಡಿಸಲಾಯಿತು.
ಮಾದಕ ವಸ್ತುಗಳ ವಿಲೇವಾರಿ ಪ್ರಕ್ರಿಯೆಯು ಸಂಪೂರ್ಣವಾಗಿ ಕಾನೂನುಬದ್ಧವಾಗಿ ಮತ್ತು ಪಾರದರ್ಶಕವಾಗಿ ನಡೆದಿದೆ. ಈ ಸಂದರ್ಭದಲ್ಲಿ ಎಎನ್ಟಿಎಫ್ (ANTF) ನೋಡಲ್ ಅಧಿಕಾರಿಗಳು, ಜಿಲ್ಲಾ ಮಾದಕ ವಸ್ತುಗಳ ವಿಲೇವಾರಿ ಸಮಿತಿಯ ಸದಸ್ಯರು ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಉಪಸ್ಥಿತರಿದ್ದು, ನ್ಯಾಯಾಲಯದ ನಿರ್ದೇಶನದಂತೆ ಇಡೀ ಪ್ರಕ್ರಿಯೆಯನ್ನು ನಿಯಮಾನುಸಾರ ಯಶಸ್ವಿಯಾಗಿ ಪೂರ್ಣಗೊಳಿಸಿದರು.
ಜಿಲ್ಲೆಯಲ್ಲಿ ಮಾದಕ ವಸ್ತುಗಳ ಜಾಲವನ್ನು ಸಂಪೂರ್ಣವಾಗಿ ಮಟ್ಟಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಮುಂದುವರಿಸಲಿದೆ ಎಂದು ಈ ವೇಳೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.