ಮೈಸೂರು: ಆಷಾಢ ಮಾಸದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿಯ ಹೆಮ್ಮೆಯ ಚಾಮುಂಡಿಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತಗೊಳಿಸುವ ಉದ್ದೇಶದಿಂದ, ಮೈಸೂರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಿ.ಕೃಷ್ಣ ಅವರ ನೇತೃತ್ವದಲ್ಲಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ಸಿಬ್ಬಂದಿ ಗುರುವಾರ ಮುಂಜಾನೆ ಬೃಹತ್ ಶ್ರಮದಾನ ಹಾಗೂ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ತಾಲ್ಲೂಕು ಪಂಚಾಯಿತಿ ಹಾಗೂ ಚಾಮುಂಡಿಬೆಟ್ಟ ಗ್ರಾಮ ಪಂಚಾಯಿತಿಯ ಜಂಟಿ ಸಹಯೋಗದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ, ಬೆಟ್ಟದ ಪಾದದಿಂದ ದೇವಾಲಯದವರೆಗಿನ ಮೆಟ್ಟಿಲುಗಳನ್ನು ಗುಡಿಸಿ, ಮಾರ್ಗ ಮಧ್ಯದಲ್ಲಿದ್ದ ಮುಳ್ಳಿನ ಗಿಡಗಳನ್ನು ತೆರವುಗೊಳಿಸಲಾಯಿತು. ಅಲ್ಲದೆ, ಭಕ್ತರು ಎಸೆದಿದ್ದ ಪ್ಲಾಸ್ಟಿಕ್ ಪೇಪರ್, ನೀರಿನ ಬಾಟಲಿ ಸೇರಿದಂತೆ ಪರಿಸರಕ್ಕೆ ಹಾನಿಕಾರಕವಾದ ಭಾರಿ ಪ್ರಮಾಣದ ತ್ಯಾಜ್ಯವನ್ನು ಸಂಗ್ರಹಿಸಿ ಯಶಸ್ವಿಯಾಗಿ ವಿಲೇವಾರಿ ಮಾಡಲಾಯಿತು.
ಇಒ ಸಿ.ಕೃಷ್ಣ ಅವರ ಮಾತು: “ಆಷಾಢ ಮಾಸದಲ್ಲಿ ಸಾವಿರಾರು ಭಕ್ತರು ಮೆಟ್ಟಿಲುಗಳ ಮೂಲಕ ಬೆಟ್ಟ ಹತ್ತಿ ದೇವಿಯ ದರ್ಶನ ಪಡೆಯುತ್ತಾರೆ. ಈ ಸಂದರ್ಭದಲ್ಲಿ ಬೆಟ್ಟದ ಪರಿಸರ ಹಾಳಾಗದಂತೆ ತಡೆಯಲು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ನಮ್ಮ ಎಲ್ಲಾ ಗ್ರಾಮ ಪಂಚಾಯಿತಿಗಳ ಪೌರಕಾರ್ಮಿಕರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಒಟ್ಟಾಗಿ ಈ ಶ್ರಮದಾನ ನಡೆಸಿದ್ದೇವೆ” ಎಂದರು.
ಪಿಡಿಒ ಕೆ.ರುಕ್ಮಾಂಗದ ಮನವಿ: “ಚಾಮುಂಡಿಬೆಟ್ಟದ ಪ್ರಕೃತಿ ಸೌಂದರ್ಯ ಹಾಗೂ ಆಸ್ಮಿತೆಯನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ. ದೇವಸ್ಥಾನಕ್ಕೆ ಬರುವ ಭಕ್ತರು ಪ್ಲಾಸ್ಟಿಕ್ ವಸ್ತುಗಳನ್ನು ತಂದು ಎಲ್ಲೆಂದರಲ್ಲಿ ಬಿಸಾಡದೆ, ಪ್ಲಾಸ್ಟಿಕ್ ಮುಕ್ತ ಬೆಟ್ಟ ನಿರ್ಮಾಣಕ್ಕೆ ಸಹಕರಿಸಬೇಕು” ಎಂದು ಕೋರಿದರು.
ಸ್ವಚ್ಛತಾ ಕಾರ್ಯಕ್ರಮದ ಜೊತೆಯಲ್ಲೇ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಚಾಮುಂಡಿಬೆಟ್ಟಕ್ಕೆ ಆಗಮಿಸಿದ್ದ ಭಕ್ತರು ಹಾಗೂ ಪ್ರವಾಸಿಗರಿಗಾಗಿ ಜಾಗೃತಿ ಜಾಥಾವನ್ನು ಆಯೋಜಿಸಲಾಗಿತ್ತು.
ಅರ್ಹ ಮತದಾರರು ಯಾವುದೇ ಕಾರಣಕ್ಕೂ ಮತದಾನದ ಹಕ್ಕಿನಿಂದ ವಂಚಿತರಾಗಬಾರದು.
ಸಾರ್ವಜನಿಕರು ತಮ್ಮ ಮನೆಗೆ ಬರುವ ಬಿಎಲ್ಒ (BLO) ಹಾಗೂ ಇತರೆ ಸಿಬ್ಬಂದಿಗೆ ಸೂಕ್ತ ಮಾಹಿತಿ ನೀಡಿ ಸಹಕರಿಸಬೇಕು.
ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲೂ ಸೌಲಭ್ಯ ಕೇಂದ್ರಗಳನ್ನು ತೆರೆಯಲಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬಹುದು.
ಈ ಶ್ರಮದಾನ ಮತ್ತು ಜಾಗೃತಿ ಅಭಿಯಾನದಲ್ಲಿ ಚಾಮುಂಡಿಬೆಟ್ಟ ಗ್ರಾ.ಪಂ. ಆಡಳಿತಾಧಿಕಾರಿ ವೈ.ಎನ್.ಮಮತಾ, ತಾಲ್ಲೂಕು ಪಂಚಾಯಿತಿ ಸಿಬ್ಬಂದಿ, ಎಲ್ಲಾ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು (PDO), ಕಾರ್ಯದರ್ಶಿಗಳು, SDAA, DEO ಗಳು ಹಾಗೂ ಪೌರಕಾರ್ಮಿಕರು ಸಕ್ರಿಯವಾಗಿ ಪಾಲ್ಗೊಂಡಿದ್ದರು.