ವಿಜಯಪುರ: ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ ಹಾಗೂ ಶಾಲಾ ವಿದ್ಯಾರ್ಥಿಗಳು ಮಾದಕ ವ್ಯಸನಗಳಿಗೆ ಬಲಿಯಾಗುತ್ತಿರುವುದನ್ನು ತಡೆಯುವ ಮತ್ತು ಆರೋಗ್ಯವಂತ ಸಮಾಜವನ್ನು ನಿರ್ಮಿಸುವ ನಿಟ್ಟಿನಲ್ಲಿ, ಸಿಂದಗಿ ತಾಲೂಕಿನ ಗಬಸಾವಳಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಮಾದಕ ದ್ರವ್ಯ ನಿಯಂತ್ರಣ ಕುರಿತು ವಿಶೇಷ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಪೊಲೀಸ್ ಸಿಬ್ಬಂದಿ ಶಂಕರ್ಲಿಂಗ್ ಕಪ್ಪೇನವರ್, ತಂಬಾಕು, ಗುಟಕಾ, ಸಿಗರೇಟ್ ಮುಂತಾದ ಮಾದಕ ವಸ್ತುಗಳ ಸೇವನೆಯು ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಬೀರುವ ಗಂಭೀರ ದುಷ್ಪರಿಣಾಮಗಳ ಕುರಿತು ಸುದೀರ್ಘವಾಗಿ ವಿವರಿಸಿದರು.
”ದುಶ್ಚಟಗಳಿಂದ ಜೀವನ ಹಾಗೂ ಆರೋಗ್ಯ ಎರಡೂ ಹಾಳಾಗುತ್ತವೆ. ಇತ್ತೀಚಿನ ದಿನಗಳಲ್ಲಿ ಶಾಲಾ ಮಕ್ಕಳು ಮತ್ತು ಯುವಕರು ಇಂತಹ ದುಶ್ಚಟಗಳಿಗೆ ಸುಲಭವಾಗಿ ದಾಸರಾಗುತ್ತಿರುವುದು ಅತ್ಯಂತ ಆತಂಕಕಾರಿ ಸಂಗತಿಯಾಗಿದೆ. ವಿದ್ಯಾರ್ಥಿಗಳು ಸದಾ ಜಾಗೃತರಾಗಿದ್ದು, ವಿದ್ಯಾರ್ಥಿ ದೆಸೆಯಿಂದಲೇ ಇಂತಹ ಮಾರಕ ಹವ್ಯಾಸಗಳಿಂದ ದೂರವಿದ್ದು, ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು.”
— ಶಂಕರ್ಲಿಂಗ್ ಕಪ್ಪೇನವರ್, ಪೊಲೀಸ್ ಸಿಬ್ಬಂದಿ
ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನ ಹಾಗೂ ಕಟ್ಟುನಿಟ್ಟಿನ ಸೂಚನೆಯ ಮೇರೆಗೆ ಜಿಲ್ಲೆಯಾದ್ಯಂತ ಎಲ್ಲಾ ಭಾಗಗಳಲ್ಲಿಯೂ ಮಾದಕ ದ್ರವ್ಯಗಳ ವಿರುದ್ಧ ಇಂತಹ ನಿರಂತರ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಅವರು ಇದೇ ವೇಳೆ ತಿಳಿಸಿದರು.
ಈ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ನೂರಾರು ವಿದ್ಯಾರ್ಥಿಗಳು ಹಾಗೂ ಗ್ರಾಮದ ಮುಖಂಡರು ಮತ್ತು ಪ್ರಮುಖರು ಉಪಸ್ಥಿತರಿದ್ದು, ಅಭಿಯಾನಕ್ಕೆ ಸಾಥ್ ನೀಡಿದರು.
ವರದಿ: ಗುಂಡು ಕುಲಕರ್ಣಿ, ವಿಜಯಪುರ