ನವದೆಹಲಿ, ಜು. ೧೭: ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಮಾತ್ರಕ್ಕೆ ಯಾವುದೇ ವ್ಯಕ್ತಿಯ ಭಾರತೀಯ ಪೌರತ್ವ ಕಳೆದುಹೋಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಚುನಾವಣಾ ಆಯೋಗವು ಪೌರತ್ವವನ್ನು ನಿರ್ಧರಿಸುವ ಸಾಂವಿಧಾನಿಕ ಪ್ರಾಧಿಕಾರವಲ್ಲ ಎಂದು ನ್ಯಾಯಾಲಯ ಪುನರುಚ್ಚರಿಸಿದೆ.
ಪಶ್ಚಿಮ ಬಂಗಾಳದಲ್ಲಿ SIR ಪ್ರಕ್ರಿಯೆಗೆ ಸಂಬಂಧಿಸಿದ ಮೇಲ್ಮನವಿ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ನ್ಯಾಯಪೀಠವು ನಡೆಸಿತು. ನ್ಯಾಯಪೀಠದಲ್ಲಿ ನ್ಯಾಯಮೂರ್ತಿ ಜೋಯ್ ಮಲ್ಯ ಬಾಗ್ಚಿ ಹಾಗೂ ನ್ಯಾಯಮೂರ್ತಿ ವಿ. ಮೋಹನ ಅವರು ಉಪಸ್ಥಿತರಿದ್ದರು.
ಅರ್ಜಿದಾರರ ಪರವಾಗಿ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣ ಅವರು ವಾದ ಮಂಡಿಸಿ, “ಲಕ್ಷಾಂತರ ಮೇಲ್ಮನವಿಗಳು ಇನ್ನೂ ಬಾಕಿ ಉಳಿದಿದ್ದು, ಅವುಗಳ ವಿಲೇವಾರಿ ಅತ್ಯಂತ ನಿಧಾನಗತಿಯಲ್ಲಿ ಸಾಗುತ್ತಿದೆ. ಮೇಲ್ಮನವಿಗಳು ಬಾಕಿ ಇರುವಾಗಲೇ ಮತಪಟ್ಟಿಯಿಂದ ಹೆಸರು ಕೈಬಿಟ್ಟವರನ್ನು ಕೆಲವು ಸರ್ಕಾರಿ ಕಲ್ಯಾಣ ಯೋಜನೆಗಳಿಂದ ಹೊರಗಿಡಲಾಗುತ್ತಿದೆ ಹಾಗೂ ಕೆಲವು ಅಗತ್ಯ ಪ್ರಮಾಣಪತ್ರಗಳನ್ನೂ ನಿರಾಕರಿಸಲಾಗುತ್ತಿದೆ,” ಎಂದು ನ್ಯಾಯಾಲಯದ ಗಮನ ಸೆಳೆದರು.
ವಾದ ಆಲಿಸಿದ ನ್ಯಾಯಮೂರ್ತಿ ಜೋಯ್ ಮಲ್ಯ ಬಾಗ್ಚಿ ಅವರು, “ಚುನಾವಣಾ ಆಯೋಗವು ಕೇವಲ ಮತದಾರರ ಪಟ್ಟಿಗೆ ಸಂಬಂಧಿಸಿದ ನಿರ್ಧಾರಗಳನ್ನು ಕೈಗೊಳ್ಳುವ ಸಂಸ್ಥೆಯಾಗಿದ್ದು, ಯಾರ ಪೌರತ್ವವನ್ನೂ ನಿರ್ಧರಿಸುವ ಸಾಂವಿಧಾನಿಕ ಅಧಿಕಾರ ಅದಕ್ಕಿಲ್ಲ,” ಎಂದು ಸ್ಪಷ್ಟಪಡಿಸಿದರು.
“ಒಂದು ವೇಳೆ ಮತಪಟ್ಟಿಯಿಂದ ಹೆಸರು ತೆಗೆದುಹಾಕುವ ಪರಿಸ್ಥಿತಿ ಬಂದರೆ, ಅಗತ್ಯವಿದ್ದರೆ ಪೌರತ್ವ ಕಾಯ್ದೆಯಡಿ ಮುಂದಿನ ಕ್ರಮಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಬಹುದು. ಆದರೆ ಅಂತಿಮ ತೀರ್ಮಾನವಾಗುವವರೆಗೆ ಸಂಬಂಧಿತ ವ್ಯಕ್ತಿಯ ಪೌರತ್ವಕ್ಕೆ ಯಾವುದೇ ಧಕ್ಕೆಯಾಗುವುದಿಲ್ಲ.”
ಇದೇ ವೇಳೆ, ಮೇಲ್ಮನವಿ ನ್ಯಾಯಮಂಡಳಿಗಳ ಕಾರ್ಯನಿರ್ವಹಣೆಯಲ್ಲಿ ಹೆಚ್ಚಿನ ಪಾರದರ್ಶಕತೆ ತರಬೇಕೆಂದು ಅರ್ಜಿದಾರರು ಮನವಿ ಮಾಡಿದರು. ಪ್ರತಿದಿನ ಎಷ್ಟು ಮೇಲ್ಮನವಿಗಳು ದಾಖಲಾಗಿವೆ, ಎಷ್ಟು ಪ್ರಕರಣಗಳ ವಿಚಾರಣೆ ನಡೆದಿದೆ ಹಾಗೂ ಎಷ್ಟು ಅರ್ಜಿಗಳು ವಿಲೇವಾರಿಯಾಗಿವೆ ಎಂಬ ಮಾಹಿತಿಯನ್ನು ಸಾರ್ವಜನಿಕವಾಗಿ ಆನ್ಲೈನ್ನಲ್ಲಿ ಪ್ರಕಟಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಅವರು ನ್ಯಾಯಾಲಯವನ್ನು ಕೋರಿದರು.
ಮತದಾರರ ಹಕ್ಕುಗಳು ಮತ್ತು ಪೌರತ್ವದ ಪ್ರಶ್ನೆಗಳು ಪರಸ್ಪರ ವಿಭಿನ್ನವಾಗಿದ್ದು, ಮತಪಟ್ಟಿಯಿಂದ ಹೆಸರು ತೆಗೆದ ತಕ್ಷಣ ಪೌರತ್ವ ರದ್ದಾಗುವುದಿಲ್ಲ ಎಂಬ ಬಲವಾದ ಸಂದೇಶ ನೀಡಿರುವ ಸುಪ್ರೀಂ ಕೋರ್ಟ್, ಪ್ರಕರಣದ ಮುಂದಿನ ವಿಚಾರಣೆಯನ್ನು ಮುಂದೂಡಿದೆ.