ಕುಶಾಲನಗರ: ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ವತಿಯಿಂದ ಠಾಣಾ ವ್ಯಾಪ್ತಿಯ ಪ್ರಮುಖ ಸ್ಥಳಗಳಾದ ಕೂಡಿಗೆ ಹಾಗೂ ಡೈರಿ ಸರ್ಕಲ್ನಲ್ಲಿ, ಹೆಲ್ಮೆಟ್ ಧರಿಸದೆ ಸಂಚಾರ ಮಾಡುತ್ತಿದ್ದ ದ್ವಿಚಕ್ರ ವಾಹನ ಸವಾರರಿಗೆ ವಿಶೇಷ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ರಸ್ತೆ ಅಪಘಾತಗಳ ಸಂಖ್ಯೆಯನ್ನು ತಡೆಯುವ ಹಾಗೂ ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಾಚರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುತ್ತಿದ್ದ ಸವಾರರನ್ನು ತಡೆದು, ಹೆಲ್ಮೆಟ್ನ ಮಹತ್ವ ಹಾಗೂ ಜೀವ ರಕ್ಷಣೆಯಲ್ಲಿ ಅದರ ಪಾತ್ರದ ಕುರಿತು ಪೊಲೀಸರು ಜಾಗೃತಿ ಮೂಡಿಸಿದರು.
ಪ್ರತಿಯೊಬ್ಬ ದ್ವಿಚಕ್ರ ವಾಹನ ಸವಾರನು ಕಡ್ಡಾಯವಾಗಿ ಶಿರಸ್ತ್ರಾಣ (ಹೆಲ್ಮೆಟ್) ಧರಿಸಿ, ಸಂಚಾರ ನಿಯಮಗಳನ್ನು ಪಾಲಿಸುವ ಮೂಲಕ ತಮ್ಮ ಜೀವ ಸುರಕ್ಷತೆಗೆ ಆದ್ಯತೆ ನೀಡಬೇಕೆಂದು ಪೊಲೀಸರು ವಿನಂತಿಸಿದರು.
ಈ ಜಾಗೃತಿ ಕಾರ್ಯಕ್ರಮದಲ್ಲಿ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.