ಬೆಂಗಳೂರು: ನಗರದ ಜೆ.ಪಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ದಕ್ಷಿಣ ವಿಭಾಗದ ಪೊಲೀಸರು, ತ್ವರಿತ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯಿಂದ ₹31.56 ಲಕ್ಷ ಮೌಲ್ಯದ 225 ಗ್ರಾಂ ಚಿನ್ನಾಭರಣಗಳನ್ನು ಪೊಲೀಸರು ಯಶಸ್ವಿಯಾಗಿ ವಶಪಡಿಸಿಕೊಂಡಿದ್ದಾರೆ.
ದಕ್ಷಿಣ ವಿಭಾಗದ ಉನ್ನತಾಧಿಕಾರಿಗಳ ಮಾರ್ಗದರ್ಶನದಲ್ಲಿ, ಜಯನಗರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರ (ACP) ನೇತೃತ್ವದಲ್ಲಿ ಜೆ.ಪಿ.ನಗರ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿಯನ್ನೊಳಗೊಂಡ ವಿಶೇಷ ತಂಡವು ಈ ಶ್ಲಾಘನೀಯ ಕಾರ್ಯಾಚರಣೆಯನ್ನು ನಡೆಸಿದೆ. ಪೊಲೀಸರ ಈ ದಕ್ಷ ಹಾಗೂ ತರಿತ ಕಾರ್ಯವೈಖರಿಗೆ ಸಾರ್ವಜನಿಕ ವಲಯದಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಸಾರ್ವಜನಿಕರ ಆಸ್ತಿ-ಪಾಸ್ತಿಗಳ ರಕ್ಷಣೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸ್ ಪಡೆ ಸದಾ ಜಾಗೃತವಾಗಿದ್ದು, ಸಂಪೂರ್ಣ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದೆ ಎಂದು ಇಲಾಖೆ ತಿಳಿಸಿದೆ.