ಚಿಕ್ಕಬಳ್ಳಾಪುರ: ಮದುವೆಯಾಗುವುದಾಗಿ ನಂಬಿಸಿ ವಿಧವೆ ಮಹಿಳೆಯೊಬ್ಬರಿಗೆ ನಂಬಿಕೆದ್ರೋಹವೆಸಗಿ, ಲೈಂಗಿಕ ಶೋಷಣೆ ನಡೆಸಿದ ಆರೋಪ ಕೆಎಸ್ಆರ್ಟಿಸಿ (KSRTC) ಬಸ್ ಕಂಡಕ್ಟರ್ ವಿರುದ್ಧ ಕೇಳಿಬಂದಿದೆ. ಪ್ರಕರಣ ಸಂಬಂಧ ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.
ಬಾಗೇಪಲ್ಲಿ ತಾಲೂಕಿನ ಗುಂಡ್ಲಪಲ್ಲಿ ಗ್ರಾಮದ ಶ್ರೀನಾಥ್ (37) ಪ್ರಕರಣದ ಆರೋಪಿಯಾಗಿದ್ದಾನೆ.
ಪರಿಚಯ ಮತ್ತು ಶೋಷಣೆ:
ಪತಿಯನ್ನು ಕಳೆದುಕೊಂಡಿದ್ದ ಸಂತ್ರಸ್ತೆ, ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಸ್ಟಾಫ್ ನರ್ಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೈಸೂರಿಗೆ ತರಬೇತಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಬಸ್ನಲ್ಲಿ ಪರಿಚಯವಾಗಿದ್ದ ಶ್ರೀನಾಥ್, ಮಹಿಳೆಯ ಫೋನ್ ನಂಬರ್ ಪಡೆದು ಆತ್ಮೀಯತೆ ಬೆಳೆಸಿಕೊಂಡಿದ್ದನು.
ಪತಿಯನ್ನು ಕಳೆದುಕೊಂಡಿದ್ದ ವಿಚಾರ ತಿಳಿದ ಆರೋಪಿ, “ನಾನೇ ನಿನ್ನನ್ನು ಮದುವೆಯಾಗುತ್ತೇನೆ” ಎಂದು ನಂಬಿಸಿದ್ದಾನೆ. ತದನಂತರ ಚಿಕ್ಕಬಳ್ಳಾಪುರ, ನಂದಿಬೆಟ್ಟ ಹಾಗೂ ಜಾಲಹಳ್ಳಿ ಕ್ರಾಸ್ ಸೇರಿದಂತೆ ವಿವಿಧ ಪ್ರದೇಶಗಳ ಲಾಡ್ಜ್ಗಳಿಗೆ ಕರೆದೊಯ್ದು ಲೈಂಗಿಕವಾಗಿ ಶೋಷಿಸಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಪರಿಣಾಮವಾಗಿ ಮಹಿಳೆ ಪ್ರಸ್ತುತ ಎರಡುವರೆ ತಿಂಗಳ ಗರ್ಭಿಣಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಅಸಲಿ ರೂಪ ಬ ಬಯಲು – ಪ್ರಾಣ ಬೆದರಿಕೆ:
ಇತ್ತೀಚೆಗೆ ಮಹಿಳೆಯು ಮದುವೆಯಾಗುವಂತೆ ಒತ್ತಾಯಿಸಿದಾಗ, ಶ್ರೀನಾಥ್ ತನಗೆ ಈಗಾಗಲೇ ಮದುವೆಯಾಗಿದ್ದು ಇಬ್ಬರು ಮಕ್ಕಳಿರುವ ವಿಚಾರವನ್ನು ಬಾಯ್ಬಿಟ್ಟಿದ್ದಾನೆ. ಅಷ್ಟೇ ಅಲ್ಲದೆ, ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಪ್ರಾಣಸಹಿತ ಉಳಿಸುವುದಿಲ್ಲವೆಂದು ಕೊಲೆ ಬೆದರಿಕೆ ಒಡ್ಡಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ವಿವರಿಸಿದ್ದಾರೆ.
ಪೊಲೀಸ್ ದೂರು ಮತ್ತು ತನಿಖೆ:
ನ್ಯಾಯಕ್ಕಾಗಿ ಸಂತ್ರಸ್ತೆ ನೀಡಿದ ದೂರಿನನ್ವಯ ಚಿಕ್ಕಬಳ್ಳಾಪುರ ಮಹಿಳಾ ಠಾಣೆ ಪೊಲೀಸರು ಆರೋಪಿ ಶ್ರೀನಾಥ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) 318(4) ಹಾಗೂ 351(3) ರ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.