ಹುಬ್ಬಳ್ಳಿ: ಕೈಯಲ್ಲಿ ಮಾರಕಾಸ್ತ್ರ ಹಿಡಿದು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡುವ ಮೂಲಕ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ ಆರೋಪಿಯನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.
ಹಳೆ ಹುಬ್ಬಳ್ಳಿಯ ಈಶ್ವರ ನಗರದ ನಿವಾಸಿ ಗಂಗಾಧರ ಮಡಿವಾಳರ ಬಂಧಿತ ಆರೋಪಿ.
ಸಾರ್ವಜನಿಕ ಸ್ಥಳದಲ್ಲಿ ಕತ್ತಿ ಹಿಡಿದುಕೊಂಡು ಫೋಟೋ ಹಾಗೂ ವೀಡಿಯೋ ಮಾಡಿಕೊಂಡಿದ್ದ ಈತ, ಅದನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದ. ಇದರಿಂದ ಸಾರ್ವಜನಿಕ ವಲಯದಲ್ಲಿ ಆತಂಕ ಮತ್ತು ಭಯದ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಕಾರ್ಯಪ್ರವೃತ್ತರಾದ ಕಸಬಾ ಪೇಟೆ ಠಾಣೆಯ ಪೊಲೀಸರು ಆರೋಪಿಯ ಹೆಡೆಮುರಿಕಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕಸಬಾ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.