ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ಕೋಳಿ ಫಾರಂ ಮೇಲೆ ಚಿರತೆ ಹಾಗೂ ಅದರ ಮರಿಗಳು ದಾಳಿ ನಡೆಸಿ, 950ಕ್ಕೂ ಹೆಚ್ಚು ಕೋಳಿ ಮರಿಗಳನ್ನು ಕೊಂದಿರುವ ದಾರುಣ ಘಟನೆ ನಡೆದಿದೆ.
ಸೋಮಶೆಟ್ಟಿಹಳ್ಳಿ ಗ್ರಾಮದ ರೈತ ಕೆಂಪೇಗೌಡ ಎಂಬವರಿಗೆ ಸೇರಿದ ಕೋಳಿ ಫಾರಂ ಇದಾಗಿದ್ದು, ಇಲ್ಲಿ ಹತ್ತು ಸಾವಿರಕ್ಕೂ ಅಧಿಕ ಕೋಳಿ ಮರಿಗಳನ್ನು ಸಾಕಾಣಿಕೆ ಮಾಡಲಾಗುತ್ತಿತ್ತು. ಕಳೆದ ತಡರಾತ್ರಿ ಫಾರಂಗೆ ನುಗ್ಗಿದ ಚಿರತೆ ಹಾಗೂ ಅದರ ಮರಿಗಳು ಒಟ್ಟು 950ಕ್ಕೂ ಹೆಚ್ಚು ಕೋಳಿ ಮರಿಗಳನ್ನು ಬಲಿಪಡೆದಿವೆ. ಇದರಿಂದ ರೈತ ಕೆಂಪೇಗೌಡರಿಗೆ ಅಂದಾಜು ಒಂದೂವರೆ ಲಕ್ಷ ರೂಪಾಯಿಗೂ ಅಧಿಕ ನಷ್ಟ ಉಂಟಾಗಿದೆ.
ಅರಣ್ಯ ಇಲಾಖೆ ಭೇಟಿ, ರೈತರಲ್ಲಿ ಆತಂಕ:
ಘಟನೆಯ ಸುದ್ದಿ ತಿಳಿದ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಮೀಪದ ಕೋಳೂರು ಗ್ರಾಮದ ಮೀಸಲು ಅರಣ್ಯ ಪ್ರದೇಶದಿಂದ ಚಿರತೆ ಆಹಾರ ಹುಡುಕಿಕೊಂಡು ನಾಡಿಗೆ ಬಂದಿರಬಹುದು ಎಂದು ಶಂಕಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ವನ್ಯಮೃಗಗಳ ಹಾವಳಿ ಹೆಚ್ಚಾಗಿದ್ದು, ಜಾನುವಾರು ಹಾಗೂ ಕೋಳಿಗಳನ್ನು ಕಳೆದುಕೊಳ್ಳುತ್ತಿರುವ ರೈತರಲ್ಲಿ ಚಿರತೆ ದಾಳಿಯಿಂದಾಗಿ ತೀವ್ರ ಆತಂಕ ಮನೆಮಾಡಿದೆ.
