ಬೆಂಗಳೂರು: ಮಸೀದಿ ಮುಂದೆ ಗಣೇಶ ಮೆರವಣಿಗೆ ಹಾಗೂ ಪಟಾಕಿ ಸಿಡಿಸುವ ವಿಚಾರವಾಗಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ್ದ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಇದೀಗ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಇಮ್ರಾನ್ ಪಾಷಾ ನಡುವೆ ವಾಕ್ಸಮರಕ್ಕೆ ಅನುವು ಮಾಡಿಕೊಟ್ಟಿದೆ.
ವಿವಾದದ ಹಿನ್ನೆಲೆ:
ಮೈಸೂರು ಜಿಲ್ಲೆಯ ಟಿ. ನರಸೀಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಧನಂಜಯ್, “ಮಸೀದಿ ಮುಂದೆ ಗಣೇಶ ಮೆರವಣಿಗೆ ಹೋಗುವಂತಿಲ್ಲ. ಮಸೀದಿ ಮುಂದೆ ಪಟಾಕಿ ಸಿಡಿಸಿದರೆ ಗ್ರಹಚಾರ ಬಿಡಿಸುತ್ತೇನೆ” ಎಂದು ಹೇಳಿದ್ದಾರೆನ್ನಲಾದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ, “ಇನ್ಸ್ಪೆಕ್ಟರ್ ರೋಡ್ ಸೈಡ್ ತರ್ಲೆ ರೀತಿ ಮಾತನಾಡಿದ್ದಾರೆ. ಇನ್ನೊಮ್ಮೆ ಹೀಗೆ ಮಾತನಾಡಿದರೆ ಠಾಣೆಗೆ ನುಗ್ಗುತ್ತೇನೆ” ಎಂದು ಎಚ್ಚರಿಕೆ ನೀಡಿದ್ದರು.
ಇಮ್ರಾನ್ ಪಾಷಾ ಆಕ್ರೋಶ:
ಪ್ರತಾಪ್ ಸಿಂಹ ಅವರ ಈ ಹೇಳಿಕೆಯ ಬೆನ್ನಲ್ಲೇ ಸಚಿವ ಜಮೀರ್ ಅಹ್ಮದ್ ಅವರ ಆಪ್ತ ಇಮ್ರಾನ್ ಪಾಷಾ ಕಟುವಾಗಿ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಮುಸ್ಲಿಮರ ಬಗ್ಗೆ ಏನಾದರೂ ಮಾತನಾಡಿದರೆ ಹುಷಾರ್. ಪ್ರತಾಪ್ ಸಿಂಹ, ನೀನು ಮೊಟ್ಟೆ ಹಾಗೂ ಚಪ್ಪಲಿಯಿಂದ ಸರಿಯಾಗಿ ಏಟು ತಿನ್ನುತ್ತೀಯಾ” ಎಂದು ಬಹಿರಂಗವಾಗಿ ಬೆದರಿಕೆ ಹಾಕಿದ್ದಾರೆ
ಇಮ್ರಾನ್ ಪಾಷಾ ಅವರು ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ಬಿಸಿಬಿಸಿ ಚರ್ಚೆಗೆ ಗ್ರಾಸವಾಗಿದೆ.