ಬಳ್ಳಾರಿ: ತಾಲೂಕಿನ ಯರಗುಡಿ ಗ್ರಾಮ ಪಂಚಾಯತಿಯಲ್ಲಿ ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಅಜೀವಿಕ ಮಿಷನ್ – ಗ್ರಾಮೀಣ’ (VB-G RAM G) ಯೋಜನೆಯ ವ್ಯಾಪಕ ಪ್ರಚಾರ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿ ಶಶಿಕಾಂತ ಶಿವಪೂರೆ ಹಾಗೂ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಬಾರಕೆರ್ ಅವರು ಬುಧವಾರ ಅಧಿಕೃತವಾಗಿ ಚಾಲನೆ ನೀಡಿದರು.
ಗ್ರಾಮ ಪಂಚಾಯತಿ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಅಧಿಕಾರಿಗಳು ಯೋಜನೆಯ ಮುಖ್ಯ ಉದ್ದೇಶಗಳು, ಸಾರ್ವಜನಿಕರಿಗೆ ಲಭ್ಯವಿರುವ ಸೌಲಭ್ಯಗಳು ಹಾಗೂ ಗ್ರಾಮೀಣ ಭಾಗದಲ್ಲಿ ಕೈಗೊಳ್ಳಬಹುದಾದ ವಿವಿಧ ಕಾಮಗಾರಿಗಳ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು.
ವೈಯಕ್ತಿಕ ಕಾಮಗಾರಿಗಳಿಗೆ ಆದ್ಯತೆ: ಯೋಜನೆಯಡಿ ಪ್ರತಿಯೊಬ್ಬ ಅರ್ಹ ಫಲಾನುಭವಿಯು ವೈಯಕ್ತಿಕ ಕಾಮಗಾರಿಗಳನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ಪ್ರಚಾರಕ್ಕೆ ನಿರ್ದೇಶನ: ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಸಾರ್ವಜನಿಕರಿಗೆ ಯೋಜನೆ ತಲುಪಿಸಲು ಡಂಗೂರ ಹಾಗೂ ಆಟೋ ಮೈಕ್ ಮೂಲಕ ಜಾಗೃತಿ ಮೂಡಿಸುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ (PDO) ಸೂಚಿಸಲಾಯಿತು.
ಕೂಲಿಕಾರ್ಮಿಕರಿಗೆ ಉದ್ಯೋಗ ಖಾತರಿ: ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಕನಿಷ್ಠ 500 ಕೂಲಿಕಾರ್ಮಿಕರಿಗೆ ಕಡ್ಡಾಯವಾಗಿ ಉದ್ಯೋಗ ಕಲ್ಪಿಸಬೇಕೆಂದು ಪಿಡಿಓ ಅವರಿಗೆ ಅಧಿಕಾರಿಗಳು ಸ್ಪಷ್ಟ ನಿರ್ದೇಶನ ನೀಡಿದರು.
ಸಭೆಯ ನಂತರ ಅಧಿಕಾರಿಗಳ ತಂಡವು ಯರಗುಡಿ ಪಂಚಾಯತಿ ವ್ಯಾಪ್ತಿಯ ಬೆಣಕಲ್ಲು ಗ್ರಾಮದಲ್ಲಿ ನಡೆಯುತ್ತಿರುವ ನಾಲಾ ಪುನಶ್ಚೇತನ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿತು. ಈ ಸಂದರ್ಭದಲ್ಲಿ ಕೆಲಸನಿರತ ಕೂಲಿಕಾರರೊಂದಿಗೆ ನೇರ ಸಂವಾದ ನಡೆಸಿದ ಉಪಕಾರ್ಯದರ್ಶಿ ಶಶಿಕಾಂತ ಶಿವಪೂರೆ ಅವರು, ಈ ಯೋಜನೆಯಡಿ ಕೈಗೊಳ್ಳಬಹುದಾದ ಒಟ್ಟು 318 ವಿವಿಧ ರೀತಿಯ ಕಾಮಗಾರಿಗಳ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಸಹಾಯಕ ನಿರ್ದೇಶಕರಾದ ಆರ್. ಕೆ. ಬಸವರಾಜ್, ಯರಗುಡಿ ಗ್ರಾಪಂ ಪಿಡಿಒ ರುದ್ರಪ್ಪ, ಜಿಲ್ಲಾ ಐಇಸಿ ಸಂಯೋಜಕ ನಟರಾಜ್, ತಾಂತ್ರಿಕ ಸಂಯೋಜಕ ವಿಜಯಮಹಾಂತೇಶ, ತಾಲೂಕು ಐಇಸಿ ಸಂಯೋಜಕ ರಮೇಶ, ತಾಂತ್ರಿಕ ಸಹಾಯಕಿ ನವ್ಯ ಶೃತಿ ಹಾಗೂ ಪಂಚಾಯತಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
