ಭಟ್ಕಳ: ತಾಲೂಕಿನ ನಗರ ಪ್ರದೇಶದಲ್ಲಿ ತಂಬಾಕು ಉತ್ಪನ್ನಗಳ ಅಕ್ರಮ ಮಾರಾಟ ಹಾಗೂ ತಂಬಾಕು ನಿಯಂತ್ರಣ ಕಾಯ್ದೆಯ (COTPA) ಉಲ್ಲಂಘನೆ ಸಾರ್ವಜನಿಕವಾಗಿ ಕಂಡುಬಂದ ಹಿನ್ನೆಲೆಯಲ್ಲಿ, ಆರೋಗ್ಯ ಇಲಾಖೆ ಮತ್ತು ತಂಬಾಕು ನಿಯಂತ್ರಣ ದಳದ ಅಧಿಕಾರಿಗಳು ಜಂಟಿಯಾಗಿ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ದಾಳಿಯ ವೇಳೆ ಒಟ್ಟು 16 ಅಂಗಡಿಗಳನ್ನು ಪರಿಶೀಲಿಸಿ, ನಿಯಮ ಉಲ್ಲಂಘಿಸಿದ ಮಾಲೀಕರಿಗೆ ದಂಡ ವಿಧಿಸಲಾಗಿದೆ.
ನಗರದ ಪ್ರಮುಖ ಕೇಂದ್ರವಾದ ಶಂಸುದ್ದೀನ್ ಸರ್ಕಲ್ ಸೇರಿದಂತೆ ವಿವಿಧ ಆಯಕಟ್ಟಿನ ಪ್ರದೇಶಗಳ ಅಂಗಡಿ ಮುಂಗಟ್ಟುಗಳ ಮೇಲೆ ಅಧಿಕಾರಿಗಳ ತಂಡ ದಿಢೀರ್ ತಪಾಸಣೆ ನಡೆಸಿತು. ಈ ವೇಳೆ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಸಂಬಂಧಿಸಿದ ಕಟ್ಟುನಿಟ್ಟಿನ ನಿಯಮಗಳನ್ನು ಗಾಳಿಗೆ ತೂರಿರುವುದು ಹಾಗೂ ಕೆಲವು ಅಂಗಡಿಗಳ ಆವರಣದಲ್ಲೇ ಸಾರ್ವಜನಿಕವಾಗಿ ತಂಬಾಕು ಸೇವನೆಗೆ ಅವಕಾಶ ಮಾಡಿಕೊಟ್ಟಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ತಂಬಾಕು ನಿಯಂತ್ರಣ ಕಾಯ್ದೆಯಡಿ ತಪ್ಪು ಎಸಗಿದ ಅಂಗಡಿ ಮಾಲೀಕರಿಂದ ಒಟ್ಟು ₹2,600 ದಂಡವನ್ನು ಸ್ಥಳದಲ್ಲೇ ವಸೂಲಿ ಮಾಡಲಾಯಿತು.
ಈ ಜಂಟಿ ವಿಶೇಷ ಕಾರ್ಯಾಚರಣೆಯಲ್ಲಿ ತಾಲೂಕಿನ ವಿವಿಧ ಇಲಾಖೆಗಳ ಪ್ರಮುಖ ಅಧಿಕಾರಿಗಳು ಭಾಗವಹಿಸಿದ್ದರು:
ಶ್ರೀನಿವಾಸ್ ಆರ್ (ಆರೋಗ್ಯ ನಿರೀಕ್ಷಣಾಧಿಕಾರಿ)
ರಾಮು (ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ)
ಅನಂತ ಮೊಗೇರ್ (ತಾಲೂಕು ವ್ಯವಸ್ಥಾಪಕರು)
ಸುಶೀಲಾ ಮೊಗೇವಿರ (ಸಿಡಿಪಿಒ)
ಉದಯ ತಲವಾರ (ಆಹಾರ ನಿರೀಕ್ಷಕರು)
ಪ್ರಕಾಶ ಶಿರಾಲಿ (ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು) ಹಾಗೂ ಸ್ಥಳೀಯ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ತಂಬಾಕು ನಿಯಂತ್ರಣ ಕಾಯ್ದೆಯನ್ನು ತಾಲೂಕಿನಾದ್ಯಂತ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಇಲಾಖೆ ಬದ್ಧವಾಗಿದೆ. ನಿಯಮ ಉಲ್ಲಂಘಿಸಿ ಶಾಲಾ-ಕಾಲೇಜುಗಳ ಸುತ್ತಮುತ್ತ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಮಾರಾಟ ಮಾಡಿದರೆ ಕಾನೂನು ಕ್ರಮ ಜರುಗಿಸಲಾಗುವುದು. ಮುಂದಿನ ದಿನಗಳಲ್ಲಿ ಇಂತಹ ತಪಾಸಣೆ ಮತ್ತು ಕಾರ್ಯಾಚರಣೆಗಳನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳು ಈ ಸಂದರ್ಭದಲ್ಲಿ ಕಟು ಎಚ್ಚರಿಕೆ ನೀಡಿದ್ದಾರೆ.