ಮೂಡಲಗಿ: ವಾಟ್ಸಾಪ್ ಸ್ಟೇಟಸ್ಗೆ ಫೋಟೋ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿ ಗ್ರಾಮದಲ್ಲಿ ನಡೆದಿದೆ.
ಕಲ್ಲೋಳಿ ಗ್ರಾಮದ ರಮೇಶ ಬಂಟ್ರೋಳಿ ಹತ್ಯೆಯಾದ ದುರ್ದೈವಿ. ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಾದ ಬನಪ್ಪ ಒಡೆಯರ್ ಹಾಗೂ ಆತನ ಪತ್ನಿ ಲಕ್ಷ್ಮೀ ಒಡೆಯರ್ ಎಂಬ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆಯ ವಿವರ:
ರಮೇಶ ಹಾಗೂ ಲಕ್ಷ್ಮೀ ಒಡೆಯರ್ ಜೊತೆಯಾಗಿ ಫೋಟೋ ತೆಗೆಸಿಕೊಂಡಿದ್ದರೆನ್ನಲಾಗಿದೆ. ಈ ಫೋಟೋವನ್ನು ರಮೇಶ ತನ್ನ ವಾಟ್ಸಾಪ್ ಸ್ಟೇಟಸ್ನಲ್ಲಿ ಹಂಚಿಕೊಂಡಿದ್ದ. ಇದರಿಂದ ಇವರಿಬ್ಬರ ನಡುವೆ ಅನೈತಿಕ ಸಂಬಂಧವಿದೆ ಎಂದು ಬನಪ್ಪ ಒಡೆಯರ್ ದಂಪತಿಗೆ ಅನುಮಾನ ಮೂಡಿತ್ತು.
ಇದೇ ವಿಚಾರವಾಗಿ ಉಂಟಾದ ಗಲಾಟೆಯ ಹಿನ್ನೆಲೆಯಲ್ಲಿ, ರಮೇಶನನ್ನು ಜಮೀನಿಗೆ ಕರೆಸಿಕೊಂಡ ದಂಪತಿ ಆತನ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಕುರಿತು ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.