ಬೆಂಗಳೂರು: ನಗರದ ಹಲಸೂರಿನಲ್ಲಿ ನಡೆದಿದ್ದ ಜಾಣ್ಮೆಯ ಕಳ್ಳತನ ಪ್ರಕರಣವೊಂದನ್ನು ಭೇದಿಸುವಲ್ಲಿ ಹಲಸೂರು ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಅಂಗಡಿಯೊಂದರ ಗೋಡೆ ಕೊರೆದು ಬರೋಬ್ಬರಿ 10 ಕೆಜಿ ಬೆಳ್ಳಿ ಆಭರಣಗಳನ್ನು ಕಳವು ಮಾಡಿದ್ದ ತಮಿಳುನಾಡು ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ತಮಿಳುನಾಡು ಮೂಲದ ತೇಜು ಎಂದು ಗುರುತಿಸಲಾಗಿದೆ. ಬಂಧಿತನಿಂದ ಸದ್ಯ ಸುಮಾರು 5 ಕೆಜಿ ತೂಕದ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿ ತೇಜುಗೆ ಇದೇ ಮೊದಲ ಕಳ್ಳತನ ಎನ್ನಲಾಗಿದೆ. ಸುಮಾರು ಒಂದು ತಿಂಗಳ ಹಿಂದೆ ಕಳ್ಳತನದ ಪ್ಲಾನ್ ಮಾಡಿದ್ದ ಈತ, ಅದಕ್ಕಾಗಿಯೇ ತಮಿಳುನಾಡಿನಿಂದ ಬೆಂಗಳೂರಿಗೆ ಬಂದಿದ್ದನು. ಹಲಸೂರಿನ ಕಾರ್ ಸ್ಟ್ರೀಟ್ನಲ್ಲಿರುವ ಅಂಗಡಿಯೊಂದನ್ನು ಟಾರ್ಗೆಟ್ ಮಾಡಿ, ಯಾರಿಗೂ ತಿಳಿಯದಂತೆ ಗೋಡೆ ಕೊರೆದು ಒಳನುಗ್ಗಿ 10 ಕೆಜಿ ಬೆಳ್ಳಿ ಆಭರಣಗಳೊಂದಿಗೆ ಪರಾರಿಯಾಗಿದ್ದನು.
ಘಟನೆ ಸಂಬಂಧ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ತನಿಖೆ ತೀವ್ರಗೊಳಿಸಿ ಆರೋಪಿಯ ಬೆನ್ನುಬಿದ್ದಿದ್ದರು. ಖಚಿತ ಮಾಹಿತಿ ಹಾಗೂ ತಾಂತ್ರಿಕ ಸುಳಿವುಗಳ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿ ತೇಜುನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೊದಲ ಕಳ್ಳತನದಲ್ಲೇ ಕೋಟ್ಯಂತರ ರೂಪಾಯಿ ಮೌಲ್ಯದ ಮಾಲು ಹೊಡೆಯಲು ಹೋಗಿ, ಈಗ ಪೊಲೀಸರ ಅತಿಥಿಯಾಗಿದ್ದಾನೆ.
ಸದ್ಯ ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಇನ್ನುಳಿದ ಮಾಲು ವಶಪಡಿಸಿಕೊಳ್ಳಲು ಹಾಗೂ ಈತನಿಗೆ ಬೇರೆ ಯಾರಾದರೂ ಸಾಥ್ ನೀಡಿದ್ದಾರೆಯೇ ಎಂಬ ಕುರಿತು ಹಲಸೂರು ಠಾಣೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.