ಚಿತ್ರದುರ್ಗ: ಮಾನ್ಯ ಮುಖ್ಯಮಂತ್ರಿಗಳು ದಿನಾಂಕ 25.07.2026 ಮತ್ತು 26.07.2026 ರಂದು ಚಿತ್ರದುರ್ಗ ಜಿಲ್ಲೆಗೆ ಆಗಮಿಸಿ ವಿವಿಧ ಅಭಿವೃದ್ಧಿ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲಾದ್ಯಂತ ಯಾವುದೇ ಲೋಪದೋಷಗಳಾಗದಂತೆ ಕಟ್ಟುನಿಟ್ಟಿನ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಈ ಕುರಿತು ದಿನಾಂಕ 24.07.2026 ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬಂದೋಬಸ್ತ್ ಕರ್ತವ್ಯಕ್ಕೆ ನೇಮಕಗೊಂಡಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಉನ್ನತ ಮಟ್ಟದ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.
ಉನ್ನತಾಧಿಕಾರಿಗಳ ಮಾರ್ಗದರ್ಶನ: ದಾವಣಗೆರೆ ಪೂರ್ವ ವಲಯದ ಪೊಲೀಸ್ ಮಹಾನಿರೀಕ್ಷಕರಾದ (IGP) ಮಾನ್ಯ ಡಾ|| ಬಿ.ಆರ್. ರವಿಕಾಂತೇಗೌಡ, ಐ.ಪಿ.ಎಸ್ ಹಾಗೂ ಚಿತ್ರದುರ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರು (SP) ಜಂಟಿಯಾಗಿ ಸಭೆಯನ್ನು ನಡೆಸಿ ಅಧಿಕಾರಿಗಳಿಗೆ ಶಿಸ್ತಿನ ಕರ್ತವ್ಯ ನಿರ್ವಹಣೆಯ ಬಗ್ಗೆ ಸೂಕ್ತ ಸೂಚನೆ ನೀಡಿದರು.
ಅಹಿತಕರ ಘಟನೆಗಳಿಗೆ ಆಸ್ಪದವಿಲ್ಲ: ಮುಖ್ಯಮಂತ್ರಿಗಳ ಪ್ರವಾಸದ ಸಮಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಭದ್ರತೆಯಲ್ಲಿ ಯಾವುದೇ ರೀತಿಯ ಸಡಿಲಿಕೆ ಇರಬಾರದು ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಲಾಯಿತು.
ಸುಗಮ ಸಂಚಾರ ಹಾಗೂ ಸಾರ್ವಜನಿಕ ಭದ್ರತೆ: ಕಾರ್ಯಕ್ರಮ ನಡೆಯುವ ಸ್ಥಳಗಳು, ವಿ.ಐ.ಪಿ ಸಂಚಾರ ಮಾರ್ಗಗಳು ಹಾಗೂ ಸಾರ್ವಜನಿಕರ ಆಗಮನದ ವೇಳೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು ಮತ್ತು ಭದ್ರತೆಯನ್ನು ಬಿಗಿಗೊಳಿಸಲು ಸೂಚಿಸಲಾಯಿತು.
ಮುಖ್ಯಮಂತ್ರಿಗಳ ಭೇಟಿಯ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲಾ ಪೊಲೀಸರು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ನಗರದಾದ್ಯಂತ ಬಿಗಿ ಪೊಲೀಸ್ ಕಾವಲು ಕಾಯಲಾಗಿದೆ.