ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಸರ್ಕಾರಿ ಜಾಗದಲ್ಲಿ ಅಂತ್ಯಕ್ರಿಯೆ ನಡೆಸಲು ಕಂದಾಯ ಇಲಾಖೆ ಅಧಿಕಾರಿಗಳು ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ, ಆಕ್ರೋಶಗೊಂಡ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಮೃತದೇಹವನ್ನು ರಸ್ತೆ ಮಧ್ಯದಲ್ಲೇ ಇಟ್ಟು ಪ್ರತಿಭಟನೆ ನಡೆಸಿದ ಘಟನೆ ಜಿಲ್ಲೆಯ ಅರದೇಶನಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಮುಂದಾದ ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ತೀವ್ರ ನೂಕಾಟ-ತಳ್ಳಾಟ ನಡೆದಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ವರದಿಗಳ ಪ್ರಕಾರ, ಅರದೇಶನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಸುಮಾರು 4 ಗುಂಟೆ ಸರ್ಕಾರಿ ಜಾಗವನ್ನು ಕಳೆದ 30 ವರ್ಷಗಳಿಂದ ವೀರಶೈವ ಸಮುದಾಯದವರು ಅಂತ್ಯಕ್ರಿಯೆಗಾಗಿ ಬಳಸುತ್ತಿದ್ದರು. ಈಗಾಗಲೇ ಅಲ್ಲಿ 30ಕ್ಕೂ ಹೆಚ್ಚು ಗೋರಿಗಳು ಕೂಡ ಇವೆ. ಇತ್ತೀಚೆಗೆ ಗ್ರಾಮದ 40 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ದಿಢೀರನೆ ಮೃತಪಟ್ಟಿದ್ದರು. ಎಂದಿನಂತೆ ಅವರ ಅಂತ್ಯಕ್ರಿಯೆ ನೆರವೇರಿಸಲು ಗ್ರಾಮಸ್ಥರು ಅದೇ ಜಾಗದಲ್ಲಿ ಗುಂಡಿ ತೋಡಿ, ಮೃತದೇಹವನ್ನು ಸ್ಮಶಾನಕ್ಕೆ ಕೊಂಡೊಯ್ದಿದ್ದಾರೆ.
ಆದರೆ, ಇದೇ ವೇಳೆ ಸ್ಥಳಕ್ಕೆ ಧಾವಿಸಿದ ಕಂದಾಯ ಇಲಾಖೆಯ ಅಧಿಕಾರಿಗಳು, “ಇದು ಸರ್ಕಾರಿ ಜಾಗ, ಇಲ್ಲಿ ಅಂತ್ಯಕ್ರಿಯೆ ನಡೆಸಲು ಕಾನೂನಿನಲ್ಲಿ ಅವಕಾಶವಿಲ್ಲ” ಎಂದು ಹೇಳಿ ಪ್ರಕ್ರಿಯೆಗೆ ತಡೆ ಒಡ್ಡಿದ್ದಾರೆ. ಇದರಿಂದಾಗಿ ಮೃತರ ಕುಟುಂಬಸ್ಥರು ಹಾಗೂ ಗ್ರಾಮಸ್ಥರ ಆಕ್ರೋಶ ಕಟ್ಟೆಯೊಡೆದಿದೆ.
ನಾವು ಕಳೆದ ಮೂರು ದಶಕಗಳಿಂದ ಇದೇ ಜಾಗವನ್ನು ಸ್ಮಶಾನವಾಗಿ ಬಳಸುತ್ತಿದ್ದೇವೆ. ಈಗ ದಿಢೀರನೆ ಬಂದು ಅಂತ್ಯಕ್ರಿಯೆ ತಡೆದರೆ ಶವವನ್ನು ಎಲ್ಲಿಗೆ ತೆಗೆದುಕೊಂಡು ಹೋಗಬೇಕು?” ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ ಗ್ರಾಮಸ್ಥರು, ಮೃತದೇಹವನ್ನು ರಸ್ತೆಯಲ್ಲೇ ಇಟ್ಟು ತೀವ್ರ ಪ್ರತಿಭಟನೆ ಆರಂಭಿಸಿದರು.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ಯತ್ನಿಸಿದಾಗ ಸಾರ್ವಜನಿಕರು ಮತ್ತು ಪೊಲೀಸರ ನಡುವೆ ತೀವ್ರ ವಾಗ್ವಾದ ಹಾಗೂ ನೂಕಾಟ-ತಳ್ಳಾಟ ನಡೆಯಿತು. ಇದರಿಂದಾಗಿ ಸ್ಥಳದಲ್ಲಿ ಕೆಲಕಾಲ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಪರಿಸ್ಥಿತಿ ಎದುರಾಗಿತ್ತು.
ಸದ್ಯ ಘಟನೆಗೆ ಸಂಬಂಧಿಸಿದಂತೆ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಹಿತಕರ ಘಟನೆಗಳು ಮರುಕಳಿಸದಂತೆ ತಡೆಯಲು ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಮೃತದೇಹದ ಗೌರವಯುತ ಅಂತ್ಯಕ್ರಿಯೆಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಹಾಗೂ ವಿವಾದ ತಿಳಿಗೊಳಿಸಲು ಕಂದಾಯ ಅಧಿಕಾರಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಗ್ರಾಮದ ಮುಖಂಡರ ನಡುವೆ ಸಂಧಾನ ಮಾತುಕತೆ ಮುಂದುವರಿದಿದೆ.