ದೊಡ್ಡಬಳ್ಳಾಪುರ: ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದೊಡ್ಡಬಳ್ಳಾಪುರ ಪೊಲೀಸ್ ಉಪವಿಭಾಗದಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ರೌಡಿ ಶೀಟರ್ಗಳ ನಿವಾಸಗಳ ಮೇಲೆ ಪೊಲೀಸರು ಅನಿರೀಕ್ಷಿತ ದಾಳಿ ನಡೆಸಿ ವ್ಯಾಪಕ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ಡಿವೈಎಸ್ಪಿ ಪಾಂಡುರಂಗ ಅವರ ಖುದ್ದು ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಉಪವಿಭಾಗದ ವ್ಯಾಪ್ತಿಗೆ ಒಳಪಡುವ 45ಕ್ಕೂ ಹೆಚ್ಚು ಸಕ್ರಿಯ ರೌಡಿ ಶೀಟರ್ಗಳ ಮನೆಗಳನ್ನು ಏಕಕಾಲದಲ್ಲಿ ತಪಾಸಣೆಗೆ ಒಳಪಡಿಸಲಾಯಿತು.
ಈ ಬೃಹತ್ ಕಾರ್ಯಾಚರಣೆಯಲ್ಲಿ ದೊಡ್ಡಬಳ್ಳಾಪುರ ನಗರ, ಗ್ರಾಮಾಂತರ, ಹೊಸಹಳ್ಳಿ, ದೊಡ್ಡಬೆಳವಂಗಲ, ವಿಶ್ವನಾಥಪುರ, ಚೆನ್ನರಾಯಪಟ್ಟಣ ಹಾಗೂ ವಿಜಯಪುರ ಪೊಲೀಸ್ ಠಾಣೆಗಳ ಇನ್ಸ್ಪೆಕ್ಟರ್ಗಳು ಹಾಗೂ ನೂರಾರು ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು. ಭಾನುವಾರ ಮುಂಜಾನೆ ರೌಡಿಗಳ ಮನೆಗಳಿಗೆ ದಿಢೀರ್ ಭೇಟಿ ನೀಡಿದ ಪೊಲೀಸ್ ತಂಡಗಳು, ಇಂಚಿಂಚೂ ಜಾಗವನ್ನು ಪರಿಶೀಲಿಸಿದವು.
ವಿವಿಧ ಹಳೇ ಹಾಗೂ ಸಕ್ರಿಯ ಪ್ರಕರಣಗಳಲ್ಲಿ ಭಾಗಿಯಾಗಿರುವ ರೌಡಿ ಶೀಟರ್ಗಳ ಮನೆಗಳಲ್ಲಿ ಕಾನೂನುಬಾಹಿರ ಆಯುಧಗಳು, ಮಾರಕಾಸ್ತ್ರಗಳು ಅಥವಾ ಅಪರಾಧ ಚಟುವಟಿಕೆಗಳಿಗೆ ಬಳಸುವ ಯಾವುದೇ ಶಂಕಾಸ್ಪದ ವಸ್ತುಗಳು ಇವೆಯೇ ಎಂದು ತೀವ್ರ ಶೋಧ ನಡೆಸಲಾಯಿತು. ಇದೇ ವೇಳೆ ಯಾವುದೇ ರೀತಿಯ ಸಮಾಜವಿರೋಧಿ ಕೃತ್ಯಗಳಲ್ಲಿ ತೊಡಗಬಾರದು ಮತ್ತು ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ರೌಡಿಗಳಿಗೆ ಕಠಿಣ ಎಚ್ಚರಿಕೆ ನೀಡಲಾಯಿತು.
“ಮುಂಜಾನೆ ನಡೆದ ಈ ತಪಾಸಣೆ ವೇಳೆ ಯಾವುದೇ ಮನೆಗಳಲ್ಲಿ ಮಾರಕಾಸ್ತ್ರಗಳಾಗಲಿ ಅಥವಾ ಅಪರಾಧ ಕೃತ್ಯಗಳಿಗೆ ಬಳಸುವ ಯಾವುದೇ ಅಕ್ರಮ ವಸ್ತುಗಳಾಗಲಿ ಪತ್ತೆಯಾಗಿಲ್ಲ.”
ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಪೊಲೀಸರು ಕೈಗೊಂಡ ಈ ದಿಢೀರ್ ಕ್ರಮವು ಅಪರಾಧ ಜಗತ್ತಿಗೆ ತಕ್ಕ ಎಚ್ಚರಿಕೆಯ ಸಂದೇಶ ರವಾನಿಸಿದ್ದು, ನಾಗರಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.