ಹಾವೇರಿ: ಜಿಲ್ಲೆಯ ಹಾನಗಲ್ ತಾಲೂಕಿನ ರಾಮತೀರ್ಥ ಹೊಸಕೊಪ್ಪ ಗ್ರಾಮದಲ್ಲಿ ನಡೆದ ೨೦ ವರ್ಷದ ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಅನುಪಮಾ ಸಾವಿನ ಪ್ರಕರಣಕ್ಕೆ ಇದೀಗ ಸ್ಫೋಟಕ ತಿರುವು ಸಿಕ್ಕಿದ್ದು, ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದೆ.
ಮನೆಯ ಎದುರಿನ ನಿವಾಸಿಯಾಗಿರುವ ಅಕ್ಷಯ ಎಂಬ ವಿವಾಹಿತ ಯುವಕನ ವಿರುದ್ಧ ಮೃತ ಅನುಪಮಾ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಕ್ಷಯ ಮನೆಗೆ ಬಂದು ಲೈಂಗಿಕ ಕಿರುಕುಳ ನೀಡುತ್ತಿದ್ದ, ಖಾಸಗಿ ಅಂಗಗಳನ್ನು ಸ್ಪರ್ಶಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದ ಅಲ್ಲದೆ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ತೋರಿಸಿ ಬೆದರಿಕೆ ಹಾಕುತ್ತಿದ್ದ ಎಂದು ಕುಟುಂಬಸ್ಥರು ದೂರಿದ್ದಾರೆ.
ಅಕ್ಕ-ತಂಗಿ ಸಂಭಾಷಣೆಯ ಆಡಿಯೋ ಲಭ್ಯ
ಈ ಸತತ ಕಿರುಕುಳದ ವಿಚಾರವನ್ನು ಅನುಪಮಾ ಸಾವಿಗೂ ಮುನ್ನ ತನ್ನ ಅಕ್ಕನ ಬಳಿ ಹಂಚಿಕೊಂಡಿದ್ದಳು ಎನ್ನಲಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಸಾವಿಗೂ ಮುನ್ನ ಅಕ್ಕ-ತಂಗಿ ನಡುವೆ ನಡೆದ ಸಂಭಾಷಣೆಯ ಆಡಿಯೋ ಕೂಡ ಲಭ್ಯವಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಮೃತ ಯುವತಿ ದರ್ಶನ ಎಂಬ ಯುವಕನನ್ನು ಪ್ರೀತಿಸುತ್ತಿದ್ದು, ಈ ವಿಷಯ ಒಂದು ವರ್ಷದ ಹಿಂದೆಯೇ ಕುಟುಂಬಕ್ಕೆ ತಿಳಿದಿತ್ತು. ಆದಾಗ್ಯೂ ಎದುರು ಮನೆಯ ಅಕ್ಷಯ ಆಗಾಗ ಮನೆಗೆ ಬಂದು ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.
ತನಿಖೆ ತೀವ್ರಗೊಳಿಸಿದ ಹಾನಗಲ್ ಪೊಲೀಸರು
ಅನುಪಮಾಳ ಸಾವಿಗೆ ಅಕ್ಷಯನೇ ನೇರ ಕಾರಣ ಎಂದು ಆರೋಪಿಸಿರುವ ಮೃತರ ಕುಟುಂಬಸ್ಥರು, ಪ್ರಕರಣದ ಸಮಗ್ರ ತನಿಖೆ ನಡೆಸಿ ಸೂಕ್ತ ನ್ಯಾಯ ಒದಗಿಸುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ. ಘಟನೆ ಸಂಬಂಧ ಹಾನಗಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.