ಮದ್ದೂರು: ಕುಡಿದ ಅಮಲಿನಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ಎಸಗಿದ ಚಾಲಕನಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಟಿ.ಬಿ. ವೃತ್ತದ ಬಳಿ ನಡೆದಿದೆ.
ಚನ್ನಪಟ್ಟಣ ತಾಲೂಕಿನ ಮಾಕಳಿ ಗ್ರಾಮದ ಹರೀಶ್ ಎಂಬಾತನೇ ಈ ಅಪಘಾತ ಎಸಗಿದ ಚಾಲಕ. ಮನೆಯಲ್ಲಿ ಯಾರಿಗೂ ಹೇಳದೆ ಕಾರು ತೆಗೆದುಕೊಂಡು ಬಂದಿದ್ದ ಈತ, ಮದ್ದೂರಿನ KSRTC ಬಸ್ ನಿಲ್ದಾಣ ಹಾಗೂ ಟಿ.ಬಿ. ವೃತ್ತದ ಬಳಿ ಸಿಕ್ಕ ಸಿಕ್ಕ ವಾಹನಗಳಿಗೆ ಗುದ್ದಿ ಅರಾಜಕತೆ ಸೃಷ್ಟಿಸಿದ್ದಾನೆ. ಕೊನೆಗೆ ನಿಯಂತ್ರಣ ತಪ್ಪಿ ಕಾರು ರಸ್ತೆಯಲ್ಲೇ ಉರುಳಿ ಬಿದ್ದಿದೆ.
ಸಾರ್ವಜನಿಕರೊಂದಿಗೆ ವಾಗ್ವಾದ, ಬಿತ್ತು ಗೂಸಾ:
ಅಪಘಾತದ ಬಳಿಕ ಕಾರಿನಿಂದಿಳಿದ ಹರೀಶ್, ಸ್ಥಳದಲ್ಲಿದ್ದ ಸಾರ್ವಜನಿಕರೊಂದಿಗೂ ಉದ್ಧಟತನದಿಂದ ವಾಗ್ವಾದ ನಡೆಸಿದ್ದಾನೆ. ಇದರಿಂದ ಕೆರಳಿದ ಸಾರ್ವಜನಿಕರು ಆತನಿಗೆ ಧರ್ಮದೇಟು ನೀಡಿದ್ದಾರೆ.
ಕುಡಿತದ ಚಟಕ್ಕೆ ದಾಸನಾಗಿದ್ದ ಹರೀಶ್ನನ್ನು ಕುಟುಂಬಸ್ಥರು ಇತ್ತೀಚೆಗಷ್ಟೇ ಮದ್ಯಪಾನ ಬಿಡಿಸುವ ಕೇಂದ್ರಕ್ಕೆ ಸೇರಿಸಿದ್ದರು ಎಂದು ತಿಳಿದುಬಂದಿದೆ.
ಪೊಲೀಸರು, ಆಸ್ಪತ್ರೆ ಸಿಬ್ಬಂದಿ ಜೊತೆ ಅನುಚಿತ ವರ್ತನೆ:
ವಿಷಯ ತಿಳಿದ ತಕ್ಷಣ ಮದ್ದೂರು ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಸಾರ್ವಜನಿಕರ ಹೊಡೆತದಿಂದ ಗಾಯಗೊಂಡಿದ್ದ ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ವೇಳೆಯೂ ಆತ ಪೊಲೀಸರು ಹಾಗೂ ಆಸ್ಪತ್ರೆ ಸಿಬ್ಬಂದಿ ಜೊತೆ ಅನುಚಿತವಾಗಿ ವರ್ತಿಸಿದ್ದಾನೆ.
ಘಟನೆಗೆ ಸಂಬಂಧಿಸಿದಂತೆ ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.