ನೆಲಮಂಗಲ: ಚಾಲಕನ ನಿಯಂತ್ರಣ ತಪ್ಪಿದ ಓಮ್ನಿ ಕಾರೊಂದು ರಸ್ತೆ ಬದಿ ನಿಲ್ಲಿಸಲಾಗಿದ್ದ ಲಾರಿ ಟ್ಯಾಂಕರ್ಗೆ ಭೀಕರವಾಗಿ ಡಿಕ್ಕ ಹೊಡೆದ ಪರಿಣಾಮ, ಕಾರು ಚಾಲಕ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿರುವ ಘಟನೆ ನೆಲಮಂಗಲ ತಾಲ್ಲೂಕಿನ ಯಂಟಗಾನಹಳ್ಳಿ ಬಳಿ ಸಂಭವಿಸಿದೆ.
ಯಡಿಯೂರಿನ ದೊಡ್ಡಮಧುರೆ ಗ್ರಾಮದ ನಿವಾಸಿ ದರ್ಶನ್ (25) ಮೃತಪಟ್ಟ ದುರದೃಷ್ಟಕರ ಚಾಲಕ. ಬೆಂಗಳೂರಿನಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಈ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಓಮ್ನಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಅಪಘಾತಕ್ಕೆ ರಸ್ತೆ ಬದಿ ವಾಹನಗಳ ನಿಲುಗಡೆಯೇ ಕಾರಣ?
ರಾಷ್ಟ್ರೀಯ ಹೆದ್ದಾರಿಯ ತಿರುವುಗಳಲ್ಲಿ ಹಾಗೂ ರಸ್ತೆ ಬದಿಗಳಲ್ಲಿ ಅಸಂವಿಧಾನಿಕವಾಗಿ ಲಾರಿಗಳನ್ನು ನಿಲ್ಲಿಸುವುದೇ ಇಂತಹ ಸಾಲು ಸಾಲು ಅಪಘಾತಗಳಿಗೆ ಮುಖ್ಯ ಕಾರಣವಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೈವೇಗಳಲ್ಲಿ ವಾಹನಗಳು ಅತಿ ವೇಗವಾಗಿ ಚಲಿಸುತ್ತಿರುವುದರಿಂದ, ಇದ್ದಕ್ಕಿದ್ದಂತೆ ರಸ್ತೆ ಬದಿಯ ವಾಹನಗಳು ಕಣ್ಣಿಗೆ ಬಿದ್ದಾಗ ಚಾಲಕರಿಗೆ ವಾಹನ ನಿಯಂತ್ರಿಸಲು ಸಾಧ್ಯವಾಗದೆ ದುರಂತಗಳು ಸಂಭವಿಸುತ್ತಿವೆ.
ಮೃತದೇಹವನ್ನು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.