ಶಿಡ್ಲಘಟ್ಟ: ನಗರದಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ ಒಂದು ವಾರದ ಅವಧಿಯಲ್ಲಿ ಕಾರ್ಯಾಚರಣೆ ನಡೆಸಿದ ಶಿಡ್ಲಘಟ್ಟ ನಗರ ಪೊಲೀಸರು, ಕುಖ್ಯಾತ ಅಂತರರಾಜ್ಯ ಕಳ್ಳನನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಧರ್ಮಾವರಂ ಮೂಲದ ಜಿ.ರಾಮಕೃಷ್ಣ (60) ಬಂಧಿತ ಆರೋಪಿ. ಈತ ಕರ್ನಾಟಕ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 11 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿಯಾಗಿದ್ದಾನೆ.
ಕಳೆದ ಜುಲೈ 22, 2026 ರಂದು ಶಿಡ್ಲಘಟ್ಟ ನಗರದ ಚಿಂತಾಮಣಿ ಬೈಪಾಸ್ ರಸ್ತೆಯ ನಿವಾಸಿ ಶ್ರೀನಾಥ್ (45) ಎಂಬುವರ ಮನೆಯ ಬೀರು ಬಾಗಿಲು ಮುರಿದು, ಸುಮಾರು 50 ಗ್ರಾಂ ಬಂಗಾರದ ಆಭರಣಗಳು, 900 ಗ್ರಾಂ ಬೆಳ್ಳಿ ಹಾಗೂ ನಗದನ್ನು ಕಳ್ಳತನ ಮಾಡಲಾಗಿತ್ತು. ಈ ಕುರಿತು ನೀಡಿದ ದೂರಿನನ್ವಯ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯಲ್ಲಿ (ಮೊ.ಸಂ: 104/2025, ಕಲಂ 331(4), 305 BNS-2023) ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.
ಪ್ರಕರಣದ ತನಿಖೆಗೆ ವಿಶೇಷ ತಂಡ ರಚಿಸಿದ್ದ ಪೊಲೀಸರು, ಖಚಿತ ಮಾಹಿತಿ ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ ₹2,80,000/- ಮೌಲ್ಯದ 24 ಗ್ರಾಂ ಚಿನ್ನದ ಆಭರಣಗಳು ಹಾಗೂ 400 ಗ್ರಾಂ ಬೆಳ್ಳಿ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಕುಶಲ್ ಚೌಕ್ಸಿ, ಐ.ಪಿ.ಎಸ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಜಗನ್ನಾಥ್ ರೈ ರವರ ಸಾರಥ್ಯದಲ್ಲಿ, ಚಿಂತಾಮಣಿ ಉಪ-ವಿಭಾಗದ ಪ್ರಭಾರ ಡಿವೈ.ಎಸ್.ಪಿ ಶ್ರೀ ಪ್ರಕಾಶ್ ರೆಡ್ಡಿ ರವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ.
ಶಿಡ್ಲಘಟ್ಟ ವೃತ್ತದ ಸಿಪಿಐ ಶ್ರೀ ಆನಂದಕುಮಾರ್.ಜೆ.ಎನ್ ನೇತೃತ್ವದಲ್ಲಿ, ಪಿಎಸ್ಐ ಶ್ರೀ ವೇಣುಗೋಪಾಲ್.ಎಂ ಮತ್ತು ಅಪರಾಧ ವಿಭಾಗದ ಸಿಬ್ಬಂದಿಯನ್ನೊಳಗೊಂಡ ತಂಡವು ಆರೋಪಿಯನ್ನು ಬಂಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಯಶಸ್ವಿ ಕಾರ್ಯಾಚರಣೆ ನಡೆಸಿದ ಇಡೀ ತಂಡಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.