ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ ತಡರಾತ್ರಿ ಅಕ್ರಮವಾಗಿ ಮರಳು ಸಾಗಣೆ ಮಾಡುತ್ತಿದ್ದ ಟ್ರ್ಯಾಕ್ಟರ್ ಮತ್ತು ಟ್ರೇಲರ್ ಅನ್ನು ಸಿಂದಗಿ ಪಿಎಸ್ಐ ಶ್ರೀಕಾಂತ್ ಕಾಂಬಳೆ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದೆ.
ತಾಲೂಕಿನ ಯಂಕಂಚಿ ಗ್ರಾಮದ ಹಳ್ಳದಿಂದ ಪ್ರತಿದಿನ ತಡರಾತ್ರಿಯಾಗುತ್ತಿದ್ದಂತೆಯೇ ಮರಳು ದಂಧೆಕೋರರು ಅಕ್ರಮವಾಗಿ ಮರಳು ಮಾಫಿಯಾ ನಡೆಸುತ್ತಿದ್ದಾರೆ ಎನ್ನುವ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಸಿಂದಗಿ ಪಿಎಸ್ಐ ಶ್ರೀಕಾಂತ್ ಕಾಂಬಳೆ ಅವರು ಖುದ್ದು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅಕ್ರಮವಾಗಿ ಮರಳು ತುಂಬಿಕೊಂಡು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಹಾಗೂ ಟ್ರೇಲರ್ ಪತ್ತೆಯಾಗಿದ್ದು, ಅಧಿಕಾರಿಗಳು ಅದನ್ನು ಜಪ್ತಿ ಮಾಡಿದ್ದಾರೆ.
ದಾಳಿಯ ಸಂದರ್ಭದಲ್ಲಿ ಟ್ರ್ಯಾಕ್ಟರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಸದ್ಯ ಟ್ರ್ಯಾಕ್ಟರ್ ಮಾಲೀಕನ ವಿರುದ್ಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಸಿಂದಗಿ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಿಂದ ವ್ಯಾಪಕವಾಗಿ ಕೆಂಪು ಮರಳು ಸರಬರಾಜಾಗುತ್ತಿದ್ದು, ಮುಂದಿನ ದಿನಗಳಲ್ಲಿ ಈ ಅಕ್ರಮ ಮರಳು ಮಾಫಿಯಾಕ್ಕೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಯಾವ ಮಟ್ಟದ ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ.
ವರದಿ: ಗುಂಡು ಕುಲಕರ್ಣಿ, ವಿಜಯಪುರ
