ವಿಜಯಪುರ: ಜಿಲ್ಲೆಯ ಕಗ್ಗೋಡ ಗ್ರಾಮದ ಸಮೀಪ ಟಿಪ್ಪರ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಕಾರು ಚಾಲಕ ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದೆ.
ಅಪಘಾತದಲ್ಲಿ ತೀವ್ರವಾಗಿ ರಕ್ತಸ್ರಾವಗೊಂಡು ಮೃತಪಟ್ಟ ದುರ್ದೈವಿಯನ್ನು ವಿನೋದ್ ಗೌಡ ಪಾಟೀಲ್ (೨೮) ಎಂದು ಗುರುತಿಸಲಾಗಿದೆ.
ವಿನೋದ್ ಗೌಡ ಅವರು ಚಲಾಯಿಸುತ್ತಿದ್ದ ಕಾರು ಕಗ್ಗೋಡ ಗ್ರಾಮದ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಎದುರಿನಿಂದ ಬಂದ ವೇಗದ ಟಿಪ್ಪರ್ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಚಾಲಕ ವಿನೋದ್ ಗೌಡ ಅವರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರಾಯ್ಗೊಂಡ್ ಜಾನರ್ ಹಾಗೂ ಸಿಬ್ಬಂದಿ ಶ್ರೀಶೈಲ ಹೊನ್ನಳ್ಳಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ತಕ್ಷಣವೇ ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಈ ಭೀಕರ ಅಪಘಾತಕ್ಕೆ ಸಂಬಂಧಿಸಿದಂತೆ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಟಿಪ್ಪರ್ ಚಾಲಕನ ವಿರುದ್ಧ ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.
ಮಾಹಿತಿ ಮತ್ತು ವರದಿ: ಗುಂಡು ಕುಲಕರ್ಣಿ, ವಿಜಯಪುರ