ಯಲ್ಲಾಪುರ: ತಾಲೂಕಿನ ಶಿಡ್ಲಗುಂಡಿ ಹಾಗೂ ಮುಂಡಗೋಡ ತಾಲೂಕಿನ ಮೈನಳ್ಳಿ ನಡುವಿನ ಸಣ್ಣ ಸೇತುವೆ ಬಳಿ ಬುಧವಾರ ರಾತ್ರಿ ಎರಡು ಕೆಎಸ್ಆರ್ಟಿಸಿ ಬಸ್ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 16ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಬೆಂಗಳೂರಿನಿಂದ ಮುಂಡಗೋಡ ಮಾರ್ಗವಾಗಿ ಯಲ್ಲಾಪುರದತ್ತ ತೆರಳುತ್ತಿದ್ದ ಬಸ್ ಹಾಗೂ ಯಲ್ಲಾಪುರದಿಂದ ಮುಂಡಗೋಡ ಕಡೆಗೆ ಹೊರಟಿದ್ದ ಮತ್ತೊಂದು ಬಸ್ ನಡುವೆ ಈ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಎರಡೂ ವಾಹನಗಳ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿವೆ.
ಜೆಸಿಬಿ ಬಳಸಿ ಚಾಲಕನ ರಕ್ಷಣೆ:
ಡಿಕ್ಕಿಯ ರಭಸಕ್ಕೆ ಯಲ್ಲಾಪುರದತ್ತ ತೆರಳುತ್ತಿದ್ದ ಬಸ್ನ ಚಾಲಕ ವಾಹನದ ಮುಂಭಾಗದಲ್ಲೇ ಸಿಲುಕಿಕೊಂಡಿದ್ದರು. ಸ್ಥಳೀಯರು ತಕ್ಷಣವೇ ರಕ್ಷಣಾ ಕಾರ್ಯಕ್ಕೆ ಮುಂದಾದರಾದರೂ ಚಾಲಕನನ್ನು ಹೊರತೆಗೆಯಲು ಸಾಧ್ಯವಾಗಲಿಲ್ಲ. ಬಳಿಕ ಸ್ಥಳಕ್ಕೆ ಜೆಸಿಬಿ ಯಂತ್ರವನ್ನು ತರಿಸಿ, ಚಾಲಕನನ್ನು ಸುರಕ್ಷಿತವಾಗಿ ಹೊರಕ್ಕೆ ತೆಗೆಯಲಾಯಿತು.
ಆಸ್ಪತ್ರೆಗೆ ದಾಖಲು:
ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣವೇ ಐದು ಆಂಬ್ಯುಲೆನ್ಸ್ಗಳ ಮೂಲಕ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಗಂಭೀರವಾಗಿ ಗಾಯಗೊಂಡಿರುವ ಆರು ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂಚಾರ ವ್ಯತ್ಯಯ:
ಅಪಘಾತದ ಹಿನ್ನೆಲೆಯಲ್ಲಿ ರಾಜ್ಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡು, ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ವಿಷಯ ತಿಳಿಯುತ್ತಿದ್ದಂತೆಯೇ ಯಲ್ಲಾಪುರ ಹಾಗೂ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರಸ್ತೆ ಸಂಚಾರವನ್ನು ಸುಗಮಗೊಳಿಸಿದ್ದಾರೆ.
ಅಪಘಾತಕ್ಕೆ ನಿಖರ ಕಾರಣ ಏನೆಂಬುದು ಇನ್ನು ತಿಳಿಯಬೇಕಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.